Belagavi NewsBelgaum NewsEducationKarnataka NewsLatest

*ಜೋಯಾಲುಕ್ಕಾಸ್ ಫೌಂಡೇಶನ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಕಿಟ್ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಖಾನಾಪುರ/ಬೆಳಗಾವಿ: ಶಿಕ್ಷಣಕ್ಕೆ ಉತ್ತೇಜನ ನೀಡುವ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಉದ್ದೇಶದಿಂದ ಜೋಯಾಲುಕ್ಕಾಸ್ ಫೌಂಡೇಶನ್ ವತಿಯಿಂದ ರಾಜ್ಯಾದ್ಯಂತ 5,000 ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಬುಕ್, ಛತ್ರಿ ಸೇರಿದಂತೆ ವಿವಿಧ ಅಗತ್ಯ ವಸ್ತುಗಳನ್ನು ಒಳಗೊಂಡ ಶಿಕ್ಷಣ ಕಿಟ್‌ಗಳನ್ನು ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಈ ಯೋಜನೆಯಡಿ ಬೆಳಗಾವಿ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳ 600 ವಿದ್ಯಾರ್ಥಿಗಳಿಗೆ ಶಿಕ್ಷಣ ಕಿಟ್‌ಗಳನ್ನು ವಿತರಿಸಲಾಯಿತು. ಅದರ ಭಾಗವಾಗಿ ಖಾನಾಪುರ ತಾಲೂಕಿನ ಪ್ರಭುನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೂ ಶಿಕ್ಷಣ ಕಿಟ್‌ಗಳನ್ನು ವಿತರಿಸಿ, ಅವರಲ್ಲಿ ಹೊಸ ಶೈಕ್ಷಣಿಕ ವರ್ಷದ ಸಂಭ್ರಮವನ್ನು ಹೆಚ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜೋಯಾಲುಕ್ಕಾಸ್ ಪ್ರತಿನಿಧಿಗಳು, ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಪ್ರಮುಖ ಸಾಧನವಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಈ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Home add -Advt

ಈ ಸಂದರ್ಭದಲ್ಲಿ ಜೋಯಾಲುಕ್ಕಾಸ್‌ನ ಸಹಾಯಕ ವ್ಯವಸ್ಥಾಪಕ ಪ್ರಸಾದ್, ಸಿಆರ್‌ಒ ಮಿಥುನ್ ದೇಸಾಯಿ, ಸಂಸ್ಥೆಯ ಸಿಬ್ಬಂದಿ, ಶಾಲೆಯ ಮುಖ್ಯೋಪಾಧ್ಯಾಯ ಬಿ.ಕೆ. ತಳವಾರ, ಶಿಕ್ಷಕಿಯರಾದ ಶುಭಾ ಭಟ್ಟ, ದೀಪಾ ಹುಕ್ಕೇರಿಮಠ, ಪೂರ್ಣಿಮಾ ನಾಯಕ, ಶಿಕ್ಷಕರಾದ ಕಿಸನ್ ಮಿರಜಕರ್, ಬಸವರಾಜ ಹಂಜಿ, ಜ್ಯೋತಿ ರಂಗಿ, ಕೃಷ್ಣಾ ಪೂಜೇರಿ ಸೇರಿದಂತೆ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಣ ಕಿಟ್‌ಗಳನ್ನು ಸ್ವೀಕರಿಸಿದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರೆ, ಶಾಲೆಯ ಶಿಕ್ಷಕರು ಹಾಗೂ ಪಾಲಕರು ಜೋಯಾಲುಕ್ಕಾಸ್ ಫೌಂಡೇಶನ್‌ನ ಈ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.

ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಈ ಕೊಡುಗೆ, ವಿದ್ಯಾರ್ಥಿಗಳಲ್ಲಿ ಕಲಿಕೆಯ ಉತ್ಸಾಹವನ್ನು ಹೆಚ್ಚಿಸುವುದರ ಜೊತೆಗೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಅಗತ್ಯ ನೆರವು ಒದಗಿಸುವ ಮಹತ್ವದ ಪ್ರಯತ್ನವಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

Related Articles

Back to top button