*BREAKING: ರಾಮಲಿಂಗಾರೆಡ್ಡಿ ಬೆನ್ನಲ್ಲೇ ಖಾತೆ ಹಂಚಿಕೆ ಬಗ್ಗೆ ಕೆ.ಹೆಚ್.ಮುನಿಯಪ್ಪ ಅಸಮಾಧಾನ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ಹಂತದಲ್ಲೇ ಸಚಿವರ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದ್ದು, ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಶಾಕ್ ನಡುವೆಯೇ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ಮತ್ತೊಂದು ಆಘಾತ ಎದುರಾಗಿದೆ. ರಾಮಲಿಂಗಾರೆಡ್ಡಿ ಅಸಮಾಧಾನ ಬೆನ್ನಲ್ಲೇ ಕೆ.ಹೆಚ್.ಮುನಿಯಪ್ಪ ಕೂಡ ತಮ್ಮ ಖಾತೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಹೆಚ್.ಮುನಿಯಪ್ಪ, ಖಾತೆ ಹಂಚಿಕೆ ಸರಿಯಾಗಿ ಆಗಿಲ್ಲ. ಸೀನಿಯಾರಿಟಿಯನ್ನು ಪರಿಗಣಿಸಿಲ್ಲ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಪರಿಗಣಿಸಬೇಕಿತ್ತು ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಮೆಂಟೆನ್ ಆಗಿಲ್ಲ. ನನಗೆ ಆಹಾರ ಖಾತೆ ನೀಡಕ್ಕೆ ಅಸಮಾಧಾನವಿದೆ. ನಾನು ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆ ಕೇಳಿದ್ದೆ. ಆದರೆ ಆಹಾರಖಾತೆ ನೀಡಲಾಗಿದೆ. ಇದು ಸರಿಯಲ್ಲ ಎಂದರು.
ರಾಮಲಿಂಗಾರೆಡ್ಡಿ ಹಾಗೂ ನಾನು 7-8 ಬಾರಿ ಶಾಸಕರಾಗಿ ಆಯ್ಕೆಯಾದವರು. ನಮ್ಮ ಹಿರಿತನಕ್ಕೆ ತಕ್ಕನಾದ ಖಾತೆಗಳನ್ನು ಕೊಡಬೇಕು. ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡುತ್ತೇನೆ. ಈ ರೀತಿ ಆದರೆ 2028ರ ಚುನಾವಣೆಯಲ್ಲಿ ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.




