Latest

*ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022 ಹಾಗೂ 2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟಗೊಂಡಿದೆ. ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿವರ್ಷ ಪರಿಷತ್ತಿನ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ.ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ಅವರು ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಅಧ್ಯಕ್ಷರಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ನಿಧಿ ರೂಪದಲ್ಲಿ ಸ್ಥಾಪಿಸಿದ್ದಾರೆ. 12,61,000( ಹನ್ನೆರಡು ಲಕ್ಷದ ಅರವತ್ತೊಂದು ಸಾವಿರ)ರೂ. ಗಳ ಖಾಯಂ ದತ್ತಿನಿಧಿಯನ್ನು ಸ್ಥಾಪಿಸಿರುತ್ತಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಒಬ್ಬ ಲೇಖಕ ಹಾಗೂ ಲೇಖಕಿಗೆ ತಲಾ 30,000 (ಮೂವತ್ತು ಸಾವಿರ)ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ.


ದತ್ತಿ ದಾನಿಗಳ ಸೂಚನೆಯ ಮೇರೆಗೆ 2022 ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗೆ ಹಿರಿಯ ಲೇಖಕಿ ಶ್ರೀಮತಿ ವಸುಮತಿ ಉಡುಪ ಹಾಗೂ ಲೇಖಕ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ. 2023ನೆಯ ಸಾಲಿನ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಬಿ. ಟಿ. ಲಲಿತಾ ನಾಯಕ್ ಹಾಗೂ ಲೇಖಕ ಡಾ. ಅಮರೇಶ ನುಗಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ, ವಿಮರ್ಶಕಿ ಡಾ. ಎಂ. ಎಸ್. ಆಶಾದೇವಿ, ಪರಿಷತ್ತಿನ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

https://pragati.taskdun.com/thyroidfree-check-upkle-hospital/

Related Articles

Back to top button