
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್’ ಬೆಂಬಲಿಸಿ ಪ್ರತಿಭಟನೆಗೆ ಧುಮುಕಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಿಂದ ವಾಟಾಳ್ ನಾಗರಾಜ್ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಲೆಂದು ಮೆಜೆಸ್ಟಿಕ್ ನತ್ತ ತೆರಳಲು ಸಜ್ಜಾಗಿದ್ದರು. ಡಾಲರಸ್ ಕಾಲೋನಿ ಮನೆಯಿಂದ ವಾಟಾಳ್ ನಾಗರಾಜ್ ಹೊರ ಬರುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ.
ಮತ್ತೊಂದೆಡೆ ರಾಜಧಾನಿ ಬೆಂಗಳುರಿನ ವಿವಿಧೆಡೆ ಕನ್ನಡಪರ ಸಂಘಟನೆ ಮುಖಂಡರು, ರೈತ ಮುಖಂಡರು ಪ್ರತಿಭಟನೆ ನಡೆಸಿದ್ದು, ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಆಗ್ರಹಿಸಿದ್ದಾರೆ. ಮಂಡ್ಯದಲ್ಲಿ ರೈತ ಮುಖಂಡರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ರಾಜ್ಯ ಸರ್ಕಾರ ರೈತರ ಹಿತ ಕಾವುವಂತೆ ಒತ್ತಾಯಿಸಿದ್ದಾರೆ. ನಮಗೆ ನೀರಿಲ್ಲದ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಟ್ಟರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.



