*ಶೀತಗಾಳಿ: ಮೈಕೊರೆವ ಚಳಿಗೆ ರಾಜ್ಯದ ಜನತೆ ತತ್ತರ: 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಶೀತಗಾಳಿಯ ಅಲೆ ಜೋರಾಗಿದ್ದು, ಮೈ ಕೊರೆಯುವ ಚಳಿಗೆ ಜನರು ಗಢಗಢ ನಡುಗುತ್ತಿದ್ದಾರೆ. ಇದೇ ವೇಳೆ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಉಸಿರಾಡಲು ಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಚಳಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಜೊತೆಗೆ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಉಸಿರಾಟದ ಸಮಸ್ಯೆ, ಅನಾರೋಗ್ಯಗಳು ಹೆಚ್ಚುತ್ತಿವೆ. ದಟ್ಟವಾದ ಮೋಡ, ಮಂಜು ಕವಿದ ವಾತಾವರಣ, ವಾಯುಮಾಲಿನ್ಯದಿಂದಾಗಿ ಉಸಿರಾಟದ ಸಮಸ್ಯೆ, ಕಫ-ಕೆಮ್ಮು, ನೆಗಡಿ, ಸೀಜನಲ್ ಫೀವರ್ ಸಮಸ್ಯೆಗಳು ಹೆಚ್ಚುತ್ತಿವೆ.
ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಮುಂದುವರೆದಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಈ ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ 6.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ 20 ವರ್ಷಗಳಲ್ಲಿ ಮೂರನೇ ಬಾರಿಗೆ ದಾಖಲಾದ ಅತ್ಯಂತ ಕಡಿಮೆ ಉಷ್ಣಾಂಶ ಇದಾಗಿದೆ.
ಬೆಳಗಾವಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ.




