
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರು ಹಾಗೂ ಪರಿಸರಪ್ರೇಮಿಗಳ ಭಾರಿ ವಿರೋಧದ ಬಳಿಕ ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸಚಿವ ಸಂಪುಟ ಸಭೆ ಹಿಂಪಡೆಯಲು ಪಡೆಯಲು ತೀರ್ಮಾನ ಕೈಗೊಂಡಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ನಿರ್ಧರಿಸಲಾಗಿದೆ.
ಕಳೆದ ಅಧಿವೇಶನದಲ್ಲಿ ಈ ವಿಧೇಯಕವನ್ನು ತರಾತುರಿಯಲ್ಲಿ ಉಭಯಸದನಗಳಲ್ಲಿ ಅಂಗೀಕರಿಸಲಾಗಿತ್ತು. ಅಲ್ಲದೇ ರಾಜ್ಯಪಾಲರಿಗೂ ವಿಧೇಯಕವನ್ನು ಕಳುಹಿಸಲಾಗಿತ್ತು. ಆದರೆ ಈ ವಿಧೇಯಕಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಉದ್ಯಾನವನಗಳು ನಗರದ ಶ್ವಾಸಕೋಶ ಇದ್ದಂತೆ. ಅಂತಹ ಪ್ರಮುಖ ಉದ್ಯಾನವನಗಳ 5% ಜಾಗವನ್ನು ಖಾಸಗಿ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವುದರಿಂದ ಪಾರ್ಕ್ಗಳು ನಶಿಸಿ ಹೋಗುತ್ತವೆ ಎಂಬುದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ.



