
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.
ಇಂದು ಸಂಜೆಯಿಂದಲೇ ಬೆಂಗಳೂರು ನಗರದಲ್ಲಿ ಮಳೆ ಅಬ್ಬರ ಶುರುವಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ಬನ್ನೇರುಘಟ್ಟ ಮುಖ್ಯ ರಸ್ತೆಬಬಳಿ 15ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್, ಜಯನಗರ, ವಿಧಾನಸೌಧ ಸುತ್ತಮುತ್ತಲ ಪ್ರದೇಶ, ಆರ್.ಆರ್.ನಗರ, ಶಾಂತಿನಗರ, ಗಿರಿನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಉತ್ತರಹಳ್ಳಿ, ವಿಜಯನಗರ, ಮಲ್ಲೇಶ್ವರಂ, ರಾಜಾಜಿನಗರ, ಬನಶಂಕರಿ, ಹೊಸಕೆರೆಹಳ್ಳಿ, ವೈಟ್ ಫೀಲ್ಡ್, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲ ಪ್ರದೇಶ, ಕೆ.ಆರ್.ಮಾರ್ಕೆಟ್, ಆರ್.ಜೆ.ಟೆಕ್ ಪಾರ್ಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.
ಗುಂಡಿಮಯ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ತಗ್ಗುಪ್ರದೇಶಗಳು ನದಿಯಂತಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ರಾತ್ರಿಯಿಡಿ ಜಾಗರಣೆ ಮಾಡಬೇಕಾದ ಸ್ಥಿತಿ ಎದುರಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.