
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು. ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.



