Uncategorized
*ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ; ಊರಿಗೆ ಊರೇ ಜಲಾವೃತ; ಅಪಾಯದಲ್ಲಿದ್ದ ಕುಟುಂಬಗಳ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಡಂಕೂರು, ಕಲ್ಸಂಕ, ಬಡಗುಪೇಟೆ ಸಂಪೂರ್ನ ಜಲಾವೃತಗೊಂಡಿದೆ. ಉಡುಪಿ ನಗರಸಭಾ ವ್ಯಾಪ್ತಿಯ ಕೊಡಂಕೂರು ಪ್ರದೇಶ ನಡುಗಡ್ಡೆಯಂತಾಗಿದ್ದು, ಇಲ್ಲಿನ ಮನೆಗಳಲ್ಲಿ ವಾಸವಾಗಿರುವ ಕುಟುಂಬ ರಕ್ಷಣೆಗಾಗಿ ಮೊರೆಯಿಟ್ಟಿವೆ.
ಕೊಡಂಕೂರು ಪ್ರದೇಶ ದ್ವೀಪದಂತಾಗಿದ್ದು, ಈ ಭಾಗದ ಮನೆಗಳಲ್ಲಿ ಅಪಾಯದಲ್ಲಿ ಸಿಲುಕಿಕೊಂಡಿದ್ದ ಹಲವು ಕುಟುಂಬದವರನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಶಾಲಾ-ಕಾಲೆಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.




