
ಪ್ರಗತಿವಾಹಿನಿ ಸುದ್ದಿ: ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಹೋಟೆಲ್ ಒಂದರ ಲಿಫ್ಟ್ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ಬೆಳಕಿಗೆ ಬಂದಿದೆ.
ಕೇರಳದ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಸದ್ಯ ಲಿಫ್ಟ್ ನಲ್ಲಿ ಸಿಲುಕಿದ್ದ ಶಶಿ ತರೂರ್ ಅವರನ್ನು ರಕ್ಷಿಸಲಾಗಿದೆ. ತಿರುವನಂತಪುರಂನಲ್ಲಿ ರೋಟರಿ ಕ್ಲಬ್ ಆಫ್ ತಿರುವನಂತಪುರ ಪೂರ್ವದ ಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಕಾಂಗ್ರೆಸ್ ಸಂಸದರು ಖಾಸಗಿ ಹೋಟೆಲ್ನ ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದರು.
ತರೂರ್ ಅವರನ್ನು ರಕ್ಷಿಸಿದ ನಂತರ ಅವರು ಲಿಫ್ಟ್ನಿಂದ ಹೊರಬರುವಾಗ ನಗುತ್ತಿರುವ ದೃಶ್ಯದ ವೀಡಿಯೋ ವೈರಲ್ ಆಗಿದೆ. ತರೂರ್ ಮತ್ತು ಇತರರನ್ನು ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕರು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.


