
ಪ್ರಗತಿವಾಹಿನಿ ಸುದ್ದಿ: ನರೇಗಾ ಯೋಜನೆಯಡಿಯಲ್ಲಿ ನಡೆದಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಜಿಲ್ಲಾ ಪಂಚಾಯತ್ನ ನರೇಗಾ ವಿಭಾಗದ ಜೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇಂಜಿನಿಯರ್ ಕೃಷ್ಣಮೂರ್ತಿ ಳೊಕಾಯುಕ್ತ ಬಲೆಗೆ ಬಿದ್ದವರು. ಇವರೊಂದಿಗೆ ಅವರ ಸಹಾಯಕ ಹುಸೇನ್ ಅಲಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದ ಗುತ್ತಿಗೆದಾರ ಕೃಷ್ಣಮೂರ್ತಿ ಅವರು ನರೇಗಾ ಯೋಜನೆಯಡಿ ನೆರವೇರಿಸಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಸಹಾಯಕ ಹುಸೇನ್ ಅಲಿ ಬರೋಬ್ಬರಿ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಇದರಿಂದ ಬೇಸತ್ತ ಗುತ್ತಿಗೆದಾರ ಕೃಷ್ಣಮೂರ್ತಿಯವರು ಈ ಕುರಿತು ಕೋಲಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆದಾರನಿಂದ ಮುಂಗಡವಾಗಿ 2 ಲಕ್ಷ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಹಣದ ಸಮೇತ ಬಂಧಿಸಿದ್ದಾರೆ.




