Belagavi NewsBelgaum NewsKannada NewsKarnataka NewsLatestPolitics

*ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಮನವರಿಕೆ: 93 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಒಪ್ಪಿದ KHB ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದ ಶ್ರೀ ಮಾರುತಿ ದೇವಸ್ಥಾನಕ್ಕೆ ಸೇರಿದ ಸುಮಾರು 92 ಎಕರೆ 39 ಗುಂಟೆ ಪುಣ್ಯ ಭೂಮಿಯನ್ನು ಕರ್ನಾಟಕ ಹೌಸಿಂಗ್ ಬೋರ್ಡ್ (ಕೆಎಚ್‌ಬಿ) ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ, ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಶನಿವಾರ ಬೆಂಗಳೂರಿನ ಕೆಎಚ್‌ಬಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಗ್ರಾಮದ ಪಂಚ ಕಮಿಟಿ ಮುಖಂಡರು ಹಾಗೂ ಹಿರಿಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ರೀ ಮಾರುತಿ ದೇವಸ್ಥಾನದ ಧಾರ್ಮಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಅಧಿಕಾರಿಗಳ ಗಮನಕ್ಕೆ ತಂದರು. ದೇವಸ್ಥಾನದ ಜಮೀನಿಗೆ ಸಂಬಂಧಿಸಿದ ಎಲ್ಲಾ ಅಧಿಕೃತ ದಾಖಲೆಗಳನ್ನು ಸಲ್ಲಿಸಿ, ಜನರ ಧಾರ್ಮಿಕ ಭಾವನೆಗಳಿಗೆ ಗೌರವ ನೀಡಿ ಈ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ತಕ್ಷಣವೇ ಕೈಬಿಡುವಂತೆ ಮನವಿ ಮಾಡಿದರು.

Home add -Advt

ಮನವಿಗೆ ಸ್ಪಂದಿಸಿ, ದೇವಸ್ಥಾನದ ಜಮೀನಿನ ಕುರಿತು ಸಲ್ಲಿಸಲಾದ ದಾಖಲೆಗಳನ್ನು ಪರಿಶೀಲಿಸಿದ ಕೆಎಚ್‌ಬಿ ಅಧಿಕಾರಿಗಳು ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲಾಗುವುದು ಎಂದು ಭರವಸೆ ನೀಡಿದರು.

ಈ ಕುರಿತು ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಕ್ಷೇತ್ರದ ಜನರ ಹಿತಾಸಕ್ತಿ ಕಾಪಾಡುವುದು ನನ್ನ ಮೊದಲ ಆದ್ಯತೆ. ದೇವರ ಆಸ್ತಿಯನ್ನು ಸಂರಕ್ಷಿಸುವ ಜವಾಬ್ದಾರಿಯೂ ನಮ್ಮೆಲ್ಲರ ಮೇಲಿದೆ. ಕ್ಷೇತ್ರದ ಶಾಸಕಿ ಮಾತ್ರವಲ್ಲ, ಈ ನೆಲದ ಮಗಳಾಗಿ ಜನರ ಧಾರ್ಮಿಕ ನಂಬಿಕೆ ಮತ್ತು ಹಕ್ಕುಗಳ ರಕ್ಷಣೆಗೆ ನಾನು ಸದಾ ಮುಂಚೂಣಿಯಲ್ಲಿರುತ್ತೇನೆ,” ಎಂದು ಹೇಳಿದರು.

ಲಕ್ಷ್ಮೀ ಹೆಬ್ಬಾಳಕರ್ ಅವರ ತ್ವರಿತ ಸ್ಪಂದನೆ ಹಾಗೂ ನಿರಂತರ ಪ್ರಯತ್ನದಿಂದ ದೇವಸ್ಥಾನದ ಜಮೀನು ಸ್ವಾಧೀನ ಪ್ರಕ್ರಿಯೆ ಕೈಬಿಡುವ ಭರವಸೆ ದೊರೆತ ಹಿನ್ನೆಲೆಯಲ್ಲಿ, ಮೊದಗಾ ಗ್ರಾಮದ ಗ್ರಾಮಸ್ಥರು, ದೇವಸ್ಥಾನದ ಆಡಳಿತ ಮಂಡಳಿ, ಪಂಚ ಕಮಿಟಿ ಸದಸ್ಯರು ಹಾಗೂ ಹಿರಿಯರು ಅವರಿಗೆ ಕೃತಜ್ಞತೆ ಸಲ್ಲಿಸಿದರು.

Related Articles

Back to top button