*ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಹುಂಕರಿಪಾಟೀಲ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸುಳೇಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಸನಗೌಡ ಬಾಳಪ್ಪ ಹುಂಕರಿಪಾಟೀಲ ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಸನಗೌಡ ಹುಂಕರಿಪಾಟೀಲ ಅವರ ನಿಧನದ ಸುದ್ದಿ ತಿಳಿದು ಅವರ ಕುಟುಂಬದ ಸದಸ್ಯರನ್ನು ಭೇಟಿಯಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬಸ್ಥರೊಂದಿಗೆ ಕೆಲಕಾಲ ಮಾತನಾಡಿ ದುಃಖದಲ್ಲಿ ಭಾಗಿಯಾದರು. ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಹಾಗೂ ಸುಳೇಭಾವಿ ಗ್ರಾಮದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಬಸನಗೌಡ ಹುಂಕರಿಪಾಟೀಲ ಅವರ ಸೇವೆಯನ್ನು ಸ್ಮರಿಸಿದ ಹೆಬ್ಬಾಳಕರ್ ಅವರು, ಹಿರಿಯ ನಾಯಕರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಗಲಿಕೆ ಪಕ್ಷಕ್ಕೆ ಹಾಗೂ ಸ್ಥಳೀಯ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಡಾ ಅಧ್ಯಕ್ಷ ಯುವರಾಜ ಕದಂ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಂತರ ಮುಖಂಡರು ಮೃತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.




