HealthKarnataka NewsLatest

*ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಬೆಂಗಳೂರಿನ ಆರ್.ಆರ್. ನಗರದಲ್ಲಿ ಕೆ.ಡಿ.ಸಿ. ಡೆಂಟಲ್ ಕೇರ್ ಹಾಗೂ ಪಿ-ಕ್ಯಾನ್ಸರ್ ಸೆಂಟರ್ ವತಿಯಿಂದ ಆಯೋಜಿಸಲಾಗಿರುವ ‘ಉಚಿತ ಬಾಯಿ ಆರೋಗ್ಯ ತಪಾಸಣಾ ಶಿಬಿರ’ಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

Home add -Advt


ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ನಡೆಯಲಿರುವ ಈ ಅಭಿಯಾನವು ಸಾರ್ವಜನಿಕರಲ್ಲಿ ಬಾಯಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಜೊತೆಗೆ, ಅಗತ್ಯವಿರುವವರಿಗೆ ಸೂಕ್ತ ತಪಾಸಣೆ ಹಾಗೂ ಚಿಕಿತ್ಸೆಯ ಕುರಿತು ಮಾರ್ಗದರ್ಶನ ನೀಡುವ ಮಹತ್ವದ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.
ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆ ವಹಿಸಿ, ಆರಂಭಿಕ ಹಂತದಲ್ಲೇ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ. ಬಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಇಂತಹ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚಿನ ಜನರನ್ನು ತಲುಪುವಂತಾಗಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಸಾರ್ವಜನಿಕ ಆರೋಗ್ಯದ ವಿಚಾರದಲ್ಲಿ ಸರ್ಕಾರದ ಪ್ರಯತ್ನಗಳಿಗೆ ಖಾಸಗಿ ಸಂಸ್ಥೆಗಳು, ವೈದ್ಯಕೀಯ ಕ್ಷೇತ್ರದವರು ಹಾಗೂ ಸಂಘ-ಸಂಸ್ಥೆಗಳು ಸಹಕಾರ ನೀಡಿದಾಗ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.


ಇದೇ ವೇಳೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಡಾ. ನಿರಂಜನ ಪರಮಶೆಟ್ಟಿ, ಡಾ. ಭಾಗ್ಯಲಕ್ಷ್ಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button