
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಸಂಜೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಿ, ಗೌರವ ವಂದನೆ ಸಲ್ಲಿಸಲಾಯಿತು.
ಇದೇ ವೇಳೆ, ಗೋಕಾಕ ನಾಗರಿಕರು ಗೋಕಾಕ ಜಿಲ್ಲೆ ಆಗಲೇ ಬೇಕು ಎಂದು ಘೋಷಣೆ ಕೂಗಿದರು. ಈ ಸರಕಾರ ಗೋಕಾಕದ ಋಣದಲ್ಲಿದೆ. ಹಾಗಾಗಿ ಗೋಕಾಕನ್ನು ಜಿಲ್ಲೆ ಮಾಡುವ ಮೂಲಕ ಋಣವನ್ನು ತೀರಿಸಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಧ್ಯ ಜಿಲ್ಲೆ ವಿಭಜನೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ. ಅಂತಹ ಸಂದರ್ಭ ಬಂದಾಗ ಪರಿಶೀಲಿಸುವುದಾಗಿ ತಿಳಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಸರಕಾರಿ ಈಗಾಗಲೆ ಪ್ರವಾಹ ಪರಿಹಾರಕ್ಕಾಗಿ ಮೂರು ಸಾವಿರ ಕೋಟಿ ರೂಗಳಿಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಿದೆ. ಎಲ್ಲ ರೀತಿಯ ಕೆಲಸಗಳನ್ನು ಕೈಗೊಳ್ಳಲಾಗಿದೆ. ಅವುಗಳ ಸ್ಥಿತಿ ಗತಿ ಪರಿಶೀಲಿಸಲು ಆಗಮಿಸಿದ್ದೇನೆ. ಸೂಕ್ತ ಮಾರ್ಗದರ್ಶನ ನೀಡುತ್ತೇನೆ. ಪರಿಹಾರ ಕಾರ್ಯಕ್ಕೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂದು ತಿಳಿಸಿದರು.

ಅಲ್ಲಿಂದ ಮುಖ್ಯಮಂತ್ರಿಗಳು ಪ್ರವಾಹ ಪರಿಹಾರ ಕಾಮಗಾರಿಗಳ ಕುರಿತು ಪರಿಶೀಲನಾ ಸಭೆ ನಡೆಸಲು ಜಿಲ್ಲಾ ಪಂಚಾಯಿತಿ ಸಭಾಭವನಕ್ಕೆ ತೆರಳಿದರು.