*ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಹೋರಾಟವೇ ಉಸಿರು, ಸಂಘಟನೆಯೇ ಜೀವಾಳ ಎನ್ನುವ ರೀತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಕಳೆದ ಆರು ವರ್ಷಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಮತ್ತು ಸಂಕಷ್ಟದ ಸಮಯದಲ್ಲಿ ಸದಾ ಸನ್ನದ್ಧರಾಗಿ ನಿಲ್ಲುವ ‘ಟ್ರಬಲ್ ಶೂಟರ್’ ಆಗಿ ತಾವು ಸಲ್ಲಿಸುತ್ತಿರುವ ಸೇವೆ ಅನನ್ಯವಾದುದು. ಪಕ್ಷವನ್ನು ತಳಮಟ್ಟದಿಂದ ಶಿಖರದವರೆಗೆ ಮುನ್ನಡೆಸಿದ ನಿಮ್ಮ ಅದಮ್ಯ ಚೇತನಕ್ಕೆ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ನೀವು ತೋರುತ್ತಿರುವ ಕಾರ್ಯದಕ್ಷತೆಗೆ ಕೋಟಿ ಕೋಟಿ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ನಿಮ್ಮ ಧೃಡವಾದ ನಾಯಕತ್ವ ಮತ್ತು ಚಾಣಾಕ್ಷ ನಡೆಗಳು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಏಳಿಗೆಗೆ ಭದ್ರ ಬುನಾದಿ ಹಾಕಿವೆ. ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ ನಿಮ್ಮ ಗುಣ ಎಲ್ಲರಿಗೂ ಮಾದರಿ. ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿ ಮಾಡಿಕೊಂಡ ನಿಮ್ಮ ಹೋರಾಟದ ಹಾದಿ, ಇಂದು ರಾಜ್ಯದಾದ್ಯಂತ ಲಕ್ಷಾಂತರ ಯುವ ಜನತೆಗೆ ಸ್ಪೂರ್ತಿಯ ಸೆಲೆಯಾಗಿದೆ.
ಸತತ ಆರು ವರ್ಷಗಳ ನಿಮ್ಮ ಈ ಯಶಸ್ವಿ ಸಾರಥ್ಯವು ಇನ್ನೂ ಹತ್ತು ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಲಿ. ನಿಮ್ಮ ಮಾರ್ಗದರ್ಶನದಲ್ಲಿ ನಮ್ಮ ನಾಡು ಸಮೃದ್ಧಿಯತ್ತ ಸಾಗಲಿ ಹಾಗೂ ಪಕ್ಷವು ಮತ್ತಷ್ಟು ಗಟ್ಟಿಯಾಗಿ ನೆಲೆಯೂರಲಿ ಎಂದು ಆಶಿಸುತ್ತೇನೆ. ಈ ಸಂಘಟನಾ ಶಕ್ತಿ, ಈ ಜನಪ್ರಿಯತೆ ಸದಾ ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದ್ದಾರೆ.



