ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಂದ ಪ್ರವಾಹ ಸಂಭವಿಸುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಹವನ್ನು ಎದುರಿಸಲು ಅಧಿಕಾರಿಗಳು ಸನ್ನದ್ದರಾಗಬೇಕು ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಪ್ರವಾಹ ನಿಯಂತ್ರಣ ಮತ್ತು ಕೋವಿಡ್ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹಕ್ಕೆ ಒಳಗಾಗುವ ಗ್ರಾಮಗಳಿಗೆ ತೆರಳಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು. ಆಯಾ ತಾಲೂಕಿನ ತಹಶೀಲ್ದಾರರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪ್ರವಾಹ ನಿಯಂತ್ರಿಸಲು ಬೇಕಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು. ತಾಲೂಕಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
ತಾಲೂಕುವಾರು ನುರಿತ ಈಜುಗಾರರ ಪಟ್ಟಿ ಮಾಡಲು ಸೂಚಿಸಿದ ಅವರು, ಲೈಫ್ ಸೇವಿಂಗ್ ಜಾಕೆಟ್, ಟಾರ್ಚ್, ಹೆಲ್ಮೇಟ್ ಮುಂತಾದ ಅವಶ್ಯಕ ಸಾಮಗ್ರಿಗಳ ವ್ಯವಸ್ಥೆ ಮಾಡಲಾಗಿದ್ದು, ಕೊರತೆಯಿರುವ ಸಾಮಗ್ರಿಗಳನ್ನು ಖರೀದಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.
ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಧಿಕಾರಿಗಳಲ್ಲಿ ಯಾವುದೇ ಅನುದಾನ ಕೊರತೆ ಇರುವುದಿಲ್ಲ. ಎನ್ಡಿಆರ್ಎಫ್, ಎಸ್ಡಿಆರ್ಎಫ್ನಲ್ಲಿ 7 ಕೋಟಿ ರೂ.ಗಳ ಅನುದಾನ ಲಭ್ಯವಿದೆ. 2 ಹೊಸ ರೆಸ್ಕೋ ಬೋಟ್ಗಳನ್ನು ಖರೀದಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.