ಕರುನಾಡಿಗೆ ಶುರುವಾಯ್ತು ಮತ್ತೆ ಲಾಕ್ ಡೌನ್ ಭೀತಿ; ಸಿಎಂ ಸಭೆಗೂ ಮುನ್ನ ತುರ್ತು ಸಭೆ ಕರೆದ ಆರೋಗ್ಯ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಅನಿವಾರ್ಯವಾಗಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರ್ನಾಟಕದಲ್ಲಿ 11,698 ಜನರಲ್ಲಿ ನಿನ್ನೆ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದರೆ, ಅದರಲ್ಲಿ ರಾಜಧಾನಿ ಬೆಂಗಳೂರಿನಲ್ಲಿಯೇ 9221 ಜನರಲ್ಲಿ ವೈರಸ್ ದೃಢಪಟ್ಟಿದೆ. ಇಂದು ರಾಜ್ಯಾದ್ಯಂತ ಕೋವಿಡ್ ಕೇಸ್ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದ್ದು, ಈ ತಿಂಗಳಾಂತ್ಯ ಹಾಗೂ ಫ್ರೆಬ್ರವರಿ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೊನಾ ಸ್ಫೋಟ ಮಿತಿ ಮೀರುವ ಆತಂಕ ಎದುರಾಗಿದೆ.
ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಸಂಪುಟದ ಹಲವು ಮಂತ್ರಿಗಳಿಗೂ ಸೋಂಕು ಹರಡಿದ್ದು, ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕೈಮೀರುತ್ತಿದೆ. ಇದರ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಸುಧಾಕರ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದು, ರಾಜ್ಯದಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ತಜ್ಞರ ಹಾಗೂ ಅಧಿಕಾರಿಗಳ ಮಹತ್ವದ ಸಭೆ ನಡೆಸಲಿದ್ದು, ಸಿಎಂ ಸಭೆಗೂ ಮುನ್ನ ಆರೋಗ್ಯ ಸಚಿವ ಸುಧಾಕರ್ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಿದ್ದು, ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸಮಾಲೋಚಿಸಲಿದ್ದಾರೆ.
ಕೆಲ ಮಾಹಿತಿ ಪ್ರಕಾರ ಕೊರೊನಾ ಸೋಂಕು ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಅನಿವಾರ್ಯ ಎಂದು ಹೇಳಲಾಗುತ್ತಿದೆ. ಹತ್ತು ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಬಗ್ಗೆಯೂ ಸಚಿವರು ಹಾಗೂ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.
CM ಆಸ್ಪತ್ರೆಗೆ ದಾಖಲು, ಅಲ್ಲಿಂದಲೇ ಮಹತ್ವದ ಸಭೆ




