*ಸಂವಿಧಾನ ಬದಲಾಯಿಸ್ತೀವಿ ಎಂದು ಅಹಂಕಾರದಿಂದ ಮೆರೆದವರನ್ನೇ ನೀವು ಬದಲಾಯಿಸಿದ್ದೀರಿ; ಬಿಜೆಪಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆಯನ್ನು ಇಟ್ಟುಕೊಂಡು ಡ್ರಾಮಾ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ರಾಜ್ಯದ ದಲಿತ ಸಂಘಟನೆಗಳು ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‘ಭೀಮ ಸಂಕಲ್ಪ’ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಳ್ಳುವ ಹಿಂದಿನ ದಿನ ಐತಿಹಾಸಿಕ ಭಾಷಣ ಮಾಡುತ್ತಾ, “ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ” ಎಂದು ಎಚ್ಚರಿಸಿದ್ದರು. ಜಾತಿ ಸಮಾಜಕ್ಕೆ ಚಲನೆ ಇರುವುದಿಲ್ಲ. ಚಾಲನೆ ಬರಬೇಕಾದರೆ ಸಂವಿಧಾನಬದ್ದವಾದ ಜಾತ್ಯತೀತ ಮೌಲ್ಯಗಳು ಜಾರಿಯಾಗಿ ಶೋಷಿತ ಸಮುದಾಯಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಈ ಅವಕಾಶಗಳನ್ನು ಕಲ್ಪಿಸುವುದೇ ನನ್ನ ರಾಜಕೀಯ ಬದ್ಧತೆ ಎಂದರು.
ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರಾಗಲಿ, ಪ್ರಧಾನಿ ಮೋದಿ ಅವರಾಗಲಿ ಕ್ರಮ ಕೈಗೊಳ್ಳದೆ ಸುಮ್ಮನೆ ಕುಳಿತರು. ಆದರೆ, ನಾವು-ನೀವು ಸುಮ್ಮನೆ ಕೂರಲಿಲ್ಲ. ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ. ಇದು 2024 ರಲ್ಲೂ ಪ್ರತಿಧ್ವನಿಸಬೇಕು, ಮರುಕಳಿಸಬೇಕು ಎಂದು ಕರೆ ನೀಡಿದರು.
13 ಬೇಡಿಕೆಗಳಿಗೆ ಸ್ಪಂದನೆ
ಐಕ್ಯ ಹೋರಾಟ ಚಾಲನಾ ಸಮಿತಿ ಸಲ್ಲಿಸಿದ 13 ಬೇಡಿಕೆಗಳ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಇವುಗಳಲ್ಲಿ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ದಲಿತ ಮುಖಂಡರುಗಳಾದ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ಇಂದೂದರ ಹೊನ್ನಾಪುರ, ಜಿಗಣಿ ಶಂಕರ್, ವಿ.ನಾಗರಾಜ್, ಎನ್.ವೆಂಕಟೇಶ್ ಸೇರಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ 50 ಕ್ಕೂ ಹೆಚ್ಚು ಮುಖಂಡರುಗಳು ಉಪಸ್ಥಿತರಿದ್ದರು.
ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಹುನ್ನಾರ
ದೇಶದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸಿದ ಬಿಜೆಪಿ , ನುಡಿದಂತೆ ನಡೆದ ನಮ್ಮನ್ನು ಟೀಕಿಸುತ್ತಿದ್ದಾರೆ. ಬಡವರ- ಮಧ್ಯಮ ವರ್ಗದವರ ಕಲ್ಯಾಣಕ್ಕೆ ನಾವು ನೀಡಿರುವ ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕಾಗಿ ಸುಳ್ಳುಗಳನ್ನು ಹೊಸೆದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ನಾಡಿನ ಶೇ85 ಕ್ಕೂ ಹೆಚ್ಚು ಜನರಿಗೆ ತಲುಪುತ್ತದೆ. ಉಳಿದವು ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪುತ್ತದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ