*ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಿ: ಮೇಯರ್ ಪ್ರೀತಿ ಕಾಮಕಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೇಯರ್ ಪ್ರೀತಿ ಕಾಮಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವುದು, ದುರಸ್ತಿ, ಸ್ವಚ್ಛತೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಪರಿಷತ್ ಸಭೆಯಲ್ಲಿ ನಗರದ ಅಭಿವೃದ್ಧಿಯ ಕುರಿತು ವಿವಿಧ ವಿಷಯಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.
ವಿವಿಧ ವಾರ್ಡಗಳ ಅಭಿವೃದ್ಧಿ ಹಾಗೂ ನಾಯಿಗಳ ಹಾವಳಿಯ ಬಗ್ಗೆ ಹಾಗೂ ಕಾರ್ಯಕ್ರಮ ಪಟ್ಟಿಯಲ್ಲಿರುವ ಇತರೆ ವಿಷಯಗಳ ಕುರಿತು ಚರ್ಚೆ ನಡೆದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮೇಯರ್ ಅವರು ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡರು.
ಉಪಮೇಯರ್ ಹಣಮಂತ ಕೊಂಗಾಲಿ, ಆಯುಕ್ತ ಕಾರ್ತಿಕ್ ಎಂ. ಆಡಳಿತ ಪಕ್ಷದ ನಾಯಕ ಸಂತೋಷ ಪೇಡೇಕರ್, ವಿರೋಧ ಪಕ್ಷದ ನಾಯಕ ಸೋಬೈಲ್ ಸಂಗೊಳ್ಳಿ, ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು, ನಗರಸೇವಕರು, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆ ಆರಂಭಕ್ಕೂ ಮೊದಲು ಖ್ಯಾತ ಗಾಯಕಿ ಎಸ್ ಜಾನಕಿ ಹಾಗೂ ಇತ್ತೀಚೆಗೆ ಮರಣ ಹೊಂದಿರುವ ಪಾಲಿಕೆಯ ಮಾಜಿ ನಗರಸೇವಕರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.



