Latest

ಗುಡ್ಡ ಕುಸಿದು ಮಕ್ಕಳ ಸಾವು ಪ್ರಕರಣ; ಸರ್ಕಾರದಿಂದ ಚೆಕ್ ವಿತರಣೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನ ಗುರುಪುರ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಕುಟುಂಬಸ್ಥರಿಗೆ ಇಂದು 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಲಾಗಿದೆ.

ಮಂಗಳೂರು ಹೊರವಲಯದ ಗುರುಪುರ ಬಳಿ ಗುಡ್ಡ ಕುಸಿತದಿಂದಾಗಿ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಎನ್‍ಡಿಆರ್ ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸತತ ಕಾರ್ಯಾಚರಣೆ ನಡೆಸಿದರೂ ಮಕ್ಕಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. 16 ವರ್ಷದ ಅಣ್ಣ ಸಫ್ವಾನ್ ಹಾಗೂ 10 ವರ್ಷದ ತಂಗಿ ಸಹಲಾ ಇಬ್ಬರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು.

ಈ ಸಂಬಂಧ ಟ್ವೀಟ್ ಮಾಡಿದ್ದ ಸಿಎಂ ಬಿಎಸ್‍ವೈ, ಸಂತಾಪ ಸೂಚಿಸಿ ಮಕ್ಕಳ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದರು. ಅಲ್ಲದೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ದುಃಖಕರ. ಜಿಲ್ಲಾಡಳಿತದ ಸಕಾಲಿಕ ಪ್ರಯತ್ನದ ಹೊರತಾಗಿಯೂ ಮಕ್ಕಳನ್ನು ಬದುಕಿಸಿಕೊಳ್ಳಲು ಸಾಧ್ಯವಾಗದಿರುವುದು ವಿಷಾದನೀಯ ಎಂದು ತಿಳಿಸಿದ್ದರು.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಕ್ಕಳ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ತಿಳಿಸಿದ್ದು, ಚೆಕ್ ವಿತರಣೆ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button