
ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಅಮುಲ್ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಬಿಎಂ ಆರ್ ಸಿಎಲ್ ಒಪ್ಪಂದ ಮಾಡಿಕೊಂಡಿದೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ನಮ್ಮ ರಾಜ್ಯದ ನಂದಿನಿ ಉತ್ಪನ್ನಕ್ಕೆ ಅವಕಾಶ ನೀಡದೇ ಹೊರ ರಾಜ್ಯದ ಉತ್ಪನ್ನಗಳನ್ನು ಉತ್ತೇಜಿಸುವ ಅಗತ್ಯವೇನಿದೆ? ಎಂಬ ಆಕ್ರೋಶ ವ್ಯಕ್ತವಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ವಿಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿಗೆ ಕಾರಣವಾಗಿದೆ.
ಇದೇ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್, ಮೆಟ್ರೋ ನಿಲ್ದಾಣಗಳಲ್ಲಿ ಕೇವಾ ಎರಡು ಮಳಿಗೆಗಳಿಗೆ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. 8 ನಿಲ್ದಾಣಗಳಲ್ಲಿ ಕೆ.ಎಂ. ಎಫ್ ಗೆ ಟೆಂಡರ್ ನೀಡಲಾಗಿದೆ ಎಂದು ಹೇಳಿದರು.
ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ವಿಚಾರವಾಗಿ ಜಾಗತಿಕ ಟೆಂಡರ್ ಕರೆಯಲಾಗಿತ್ತು. ಅದರ ಅಡಿಯಲ್ಲಿ ಅಮುಲ್ ಗೆ ಎರಡು ಮಳಿಗೆಗೆ ಮಾತ್ರ ಅವಕಾಶ ಕೊಡಲಾಗಿದೆ. ಉಳಿದಂತೆ 8 ನಿಲ್ದಾಣಗಳಲ್ಲಿ ನಮ್ಮದೇ ರಾಜ್ಯದ ಕೆ.ಎಂ.ಎಫ್ ಗೆ ಟೆಂಡರ್ ನೀಡಲಾಗಿದೆ ಎಂದು ಹೇಳಿದರು.