Belagavi NewsBelgaum NewsKannada NewsKarnataka News

ಜನರ ತೀರ್ಪನ್ನು ಗೌರವಿಸಿ, ಜಗದೀಶ್ ಶೆಟ್ಟರ್ ಗೆ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಲೋಕಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ತೀರ್ಪನ್ನು ಅತ್ಯಂತ ವಿನಮ್ರ ಭಾವದಿಂದ ಗೌರವಿಸುತ್ತೇವೆ. ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಸಿದ ಎಲ್ಲ ಮತದಾರರಿಗೆ, ಸಹಕರಿಸಿದ ಮಾಧ್ಯಮದ ಸ್ನೇಹಿತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲೆಯ ಎಲ್ಲ ಹಾಲಿ ಮತ್ತು ಮಾಜಿ ಶಾಸಕರು, ಪಕ್ಷದ ಮುಖಂಡರು ಹೆಚ್ಚಿನ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. 

ಮೃಣಾಲ ಹೆಬ್ಬಾಳಕರ್ ಇನ್ನೂ ಚಿಕ್ಕವನು. ರಾಜಕೀಯದಲ್ಲಿ ಸಾಕಷ್ಟು ಅವಕಾಶವಿದೆ, ಮುಂದಿನ ದಿನಗಳಲ್ಲಿ ಅವನಿಗೆ ಉತ್ತಮ ಭವಿಷ್ಯವಿದೆ. ಇದೊಂದು ತಾತ್ಕಾಲಿಕ ಹಿನ್ನಡೆ. ದೊಡ್ಡ ಪ್ರಮಾಣದಲ್ಲಿ ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಆದಾಗ್ಯೂ ಈ ಚುನಾವಣೆಯಲ್ಲಿ ಆಗಿರುವ ಹಿನ್ನಡೆಗೆ ಆತ್ಮಾವಲೋಕನ ಮಾಡಿಕೊಂಡು, ಮುಂದಿನ ದಿನಗಳಲ್ಲಿ ಅವುಗಳನ್ನು ಸರಿಪಡಿಸಿಕೊಂಡು ಹೋಗುವ ಕೆಲಸ ಮಾಡುತ್ತೇವೆ. ನಮ್ಮ ಪರವಾಗಿ ಕೆಲಸ ಮಾಡಿದ ಎಲ್ಲ ಕಾರ್ಯಕರ್ತರ ಜೊತೆಗೆ ನಾವು ಸದಾ ಇರುತ್ತೇವೆ. ಜಿಲ್ಲೆಯ ಜನರ ಕಷ್ಟ -ಸುಖದಲ್ಲಿ ನಿರಂತರ ಭಾಗಿಯಾಗುತ್ತೇವೆ. ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರು ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಕೆಲಸ ಮಾಡಲಿ ಎಂದು ಶುಭ ಹಾರೈಸುತ್ತೇನೆ. ರಾಜ್ಯದಲ್ಲಿ ನಮ್ಮ ಸರಕಾರವಿರುವುದರಿಂದ ಜಿಲ್ಲೆಗೆ ಹೊಸ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮುಂದುವರಿಸಲಾಗುವುದು. ಜನರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿಕೊಂಡು ಮುನ್ನಡೆಯಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button