Belagavi NewsBelgaum NewsKannada NewsKarnataka NewsLatestPolitics

*ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ಎಚ್ಚರಿಕೆ ಕೊಟ್ಟ ಸಂಸದ ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬರಗಾಲ, ಅನಿಯಮಿತ ವಿದ್ಯುತ್‌ ಲೋಡ್ ಶೆಡ್ಡಿಂಗ್ ನಿಂದ ಕಂಗಾಲದ ರೈತರ ಗಾಯದ ಮೇಲೆ ಬರೆಎಳೆದಂತೆ ಇನ್ನೂ ಮುಂದೆ ರೈತರ ಪಂಪಸೆಟ್‌ಗಳಿಗೆ ವಿದ್ಯುತ್‌ ಪಡೆಯಬೇಕಾದರೇ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‌ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್‌ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಪ್ರತಿ ನೀರಾವರಿ ಪಂಪಸೆಟ್‌ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ ರೂಪಾಯಿ ನೀಡಿ: ವಿದ್ಯುತ್‌ ಸಂಪರ್ಕ ಪಡೆಯಬೇಕಾದ ಅನಿವಾರ್ಯತೆಗೆ ರೈತರನ್ನು ನೂಕಲಾಗಿದೆ.

Home add -Advt

ಮಳೆಯ ಅಭಾವದಿಂದ ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಹಾಳಾಗಿ ಹೋಗಿದೆ. ಪ್ರಸ್ತುತ ಹಿಂಗಾರಿನಲ್ಲಿ ಕೂಡ ಮಳೆಯ ಅಭಾವದಿಂದಾಗಿ ರೈತನ ಬೆಳೆಗಳು ಸಂಪೂರ್ಣ ನಾಶವಾಗಿದೆ. ಸರ್ಕಾರದ ವರದಿಯ ಪ್ರಕಾರ ರಾಜ್ಯದಲ್ಲಿ 223 ತಾಲೂಕುಗಳು ಸಂಪೂರ್ಣ, ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇದು ದುರ್ದೈವದ ಮತ್ತು ಅತ್ಯಂತ ತಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲಿಕ್ಕೆ ರೈತರು ತೆರೆದ ಬಾವಿ, ಕೊಳವೆ ಭಾವಿಗಳ ಮೊರ ಹೊಗಿದ್ದಾರೆ. ಆದರೆ ಹಗಲು ಹೊತ್ತಿನಲ್ಲಿ ವಿದ್ಯುತ್‌ ಪೂರೈಕೆಯಾಗಲಾರದೇ ಅನಿಯಮಿತ ಲೋಡ್ ಶೆಡ್ಡಿಂಗ್ ಹೊಡೆತಕ್ಕೆ ರೈತರು ಬಸವಳಿದು ಹೊಗುವಂತಾಗಿದೆ.

ಈ ಹಿಂದಿನ ರೈತ ಪರವಾದ ಯೋಜನೆಗಳಾದ ಕಿಸಾನ್ ಸಮಾನ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ರದ್ದು ಮಾಡಲಾಗಿದೆ.

ವಿದ್ಯುತ್‌ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ಹೀಗಾಗಿ ರೈತನ ಬದುಕು ಅತ್ಯಂತ ಅಸಹನಿಯವಾಗಿದೆ. ರೈತರ ಕೃಷಿ ಪಂಪಸೆಟ್‌ಗಳಿಗೆ ಸ್ವಂತ ಖರ್ಚಿನಲ್ಲಿಯೇ ಹೊಸ ಸಂಪರ್ಕ ಪಡೆಯುವ ಆದೇಶವನ್ನು ಸರ್ಕಾರ ರದ್ದುಗೊಳಿಸಿ, ಈ ಹಿಂದಿನಂತೆಯೇ ವಿದ್ಯುತ್‌ ಸಂಪರ್ಕ ನೀಡಬೇಕಾಗಿ ಸರ್ಕಾರವನ್ನು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಒತ್ತಾಯಿಸುತ್ತದೆ ಎಂದರು.

ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೇ ರಾಜ್ಯದ ಸುಮಾರು 35 ಲಕ್ಷ ಪಂಪ್‌ ಸೆಟ್ ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಅಣ್ಣಾಸಾಹೇಬ ಜೊಲ್ಲೆ ಎಚ್ಚರಿಕೆ ನೀಡಿದ್ದಾರೆ.


Related Articles

Back to top button