Latest
*ಕಾಂಗ್ರೆಸ್ ನಿಂದ ಮತ್ತೊಂದು ಕ್ಷೇತ್ರದ ಅಭ್ಯರ್ಥಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿಯಿದ್ದು, ಕಾಂಗ್ರೆಸ್ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಈಗಾಗಲೇ ಘೋಷಣೆ ಮಾಡಿದೆ. ಆದರೆ ಇದೀಗ ಮತ್ತೊಂದು ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಿದೆ.
ನಿನ್ನೆ ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿಯಲ್ಲಿ ಪ್ರಕಟವಾಗಿದ್ದ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನು ಇಂದು ಬದಲಿಸಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದಿಂದ ಡಾ.ಬಿ.ಸಿ.ಮುದ್ದು ಗಂಗಾಧರ್ ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೆ ಮುದ್ದು ಗಂಗಾಧರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಅಭ್ಯರ್ಥಿ ಬದಲಿಸುವಂತೆ ಕಾರ್ಯಕರ್ತರು ಕೂಡ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.
ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿ ಬದಲಿಸಲಾಗಿದ್ದು, ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎಂಬುವವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.




