Karnataka NewsPolitics

*ಮೈಶುಗರ್ ಕಾರ್ಖಾನೆ ಉಳಿಸಲು ಅಧಿಕಾರಿಗಳ ಜೊತೆ ಡಿಸಿಎಂ ಚರ್ಚೆ*

ಮೇಕೆದಾಟು ವಿಚಾರದಲ್ಲಿ ಕಾನೂನು ರಕ್ಷಣೆ ಸಿಗಲಿದೆ, ಬುಡಬುಡಿಕೆ- ಯೂಟರ್ನ್ ಮಾತುಗಳ ಅಗತ್ಯವಿಲ್ಲ: ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿ ಸಂಬಂಧ ಶಿವಕುಮಾರ್ ಅವರು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು. ನಂತರ ಕೆಆರ್ ಎಸ್ ನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ವಿವಿಧ ಸಭೆಗಳ ಮಾಹಿತಿ ನೀಡಿದರು.

ಬೃಂದಾವನ ಉದ್ಯಾನ ಮೇಲ್ದರ್ಜೆಗೆ ಏರಿಸಲು ಎಷ್ಟು ಜಾಗ ನಿಗದಿ ಮಾಡಿದ್ದೀರಿ ಎಂದು ಮಾಧ್ಯಮಗಳು ಕೇಳಿದಾಗ, “ಈಗ ಇರುವ 200 ಎಕರೆ ಜಾಗದಲ್ಲಿ ಯೋಜನೆ ಆರಂಭಿಸುತ್ತೇವೆ. ಅಣೆಕಟ್ಟಿನ ರಕ್ಷಣೆಗೆ ಅಗತ್ಯವಿರುವ ಜಾಗವನ್ನು ಬಿಟ್ಟು ಇತರೆ ಜಾಗದಲ್ಲಿ ನಾವು ಯೋಜನೆ ರೂಪಿಸುತ್ತಿದ್ದೇವೆ. ಎರಡು ಮೂರು ಪಂಚಾಯ್ತಿ ಸೇರಿ ಇದಕ್ಕೆ ಯೋಜನಾ ಪ್ರದೇಶ ರೂಪಿಸುತ್ತೇವೆ. ಮುಂದೆ ಹತ್ತಾರು ಸಾವಿರ ಉದ್ಯೋಗ ಸೃಷ್ಟಿಯಾಗಿ ಹೆಚ್ಚಿನ ಜನ ಆಗಮಿಸುವ ನಿರೀಕ್ಷೆಯಿಂದ ರಸ್ತೆ ಅಗಲೀಕರಣ ಸೇರಿದಂತೆ, ಈ ಭಾಗದ ಪ್ರವೇಶ ಹಾಗೂ ನಿರ್ಗಮನದಲ್ಲಿ ನಾಲ್ಕು ಪಥದ ರಸ್ತೆ, ನೀರು, ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಬೃಂದಾವನ ಹಾಗೂ ಪಕ್ಷಿಧಾಮ ಸೇರಿದಂತೆ ಪ್ರವಾಸೋದ್ಯಮ ಉತ್ತೇಜನ ನೀಡಲು ಯೋಜನೆ ರೂಪಿಸಲಾಗುತ್ತಿದೆ” ಎಂದು ತಿಳಿಸಿದರು.

ಕಳೆದ ಬಾರಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಈ ಯೋಜನೆ ಮಾಡುತ್ತೀರಾ ಎಂದು ಕೇಳಿದಾಗ, “ನಮ್ಮ ಪರಂಪರೆ ಉಳಿಸಿಕೊಂಡು, ಹಳೆಯ ಮಾದರಿಯಲ್ಲಿ ಕೆಲವು ಮಾರ್ಪಾಡು ಮಾಡಿಕೊಳ್ಳಲಾಗಿದೆ. ಈ ಯೋಜನೆಗೆ ನಾವು 2 ಸಾವಿರ ಕೋಟಿ ಅನುದಾನ ಇಟ್ಟುಕೊಂಡಿದ್ದು, ಇದನ್ನು ಮಾಡುವವರು ಯಾವ ರೀತಿ ಮಾಡಬೇಕು ಎಂದು ಕೆಲವು ಮಾರ್ಗಸೂಚಿಯನ್ನು ನಿಗದಿಪಡಿಸಿದ್ದೇವೆ” ಎಂದರು.

ಈ ಯೋಜನೆಗೆ ಕೆಲವು ಸಂಘಟನೆಗಳ ವಿರೋಧವಿದೆ ಎಂಬ ಪ್ರಶ್ನೆಗೆ, “ಈ ಯೋಜನೆಗೆ ಯಾರ ವಿರೋಧವಿದೆ? ಸರ್ಕಾರ ಎಲ್ಲರ ಸಲಹೆಯನ್ನು ಕೇಳುತ್ತೇವೆ. ಈ ಯೋಜನೆಗೆ ಯಾರ ವಿರೋಧವಿಲ್ಲ. ನಮ್ಮ ಅಭಿಪ್ರಾಯವನ್ನು ಕೇಳಿ ಎಂದು ಹೇಳಿದ್ದಾರೆ. ಅಣೆಕಟ್ಟು ರಕ್ಷಣೆಯನ್ನು ಮಾಡುತ್ತೇವೆ. ಅಣೆಕಟ್ಟಿನ ಘನತೆ ಹೆಚ್ಚಿಸಿ ಆರ್ಥಿಕ ಅಭಿವೃದ್ಧಿಗೆ ಯೋಜನೆ ರೂಪಿಸುತ್ತಿದ್ದಾರೆ” ಎಂದು ತಿಳಿಸಿದರು.

ಹಣ ಮಾಡಲು ಈ ಯೋಜನೆ ಎಂಬ ವಿರೋಧ ಪಕ್ಷದ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ಅವರು ಏನಾದರೂ ಹೇಳಲಿ. ಅವರ ಛಾಯೆಯನ್ನು ನಮ್ಮ ಮೇಲೆ ಹಾಕುತ್ತಿದ್ದಾರೆ. ಅವರಿಗೆ ದುಡ್ಡು ಮಾಡುವ ರೂಢಿ ಇದೆ” ಎಂದು ತಿಳಿಸಿದರು.

ಮೈಶುಗರ್ ಕಾರ್ಖಾನೆ ಉಳಿಸಲು ಚರ್ಚೆ:

“ಮಂಡ್ಯ ಜಿಲ್ಲೆಯ ಸಮಸ್ಯೆ ಕುರಿತು ಇಲ್ಲಿನ ನಾಯಕರ ಜತೆ ಚರ್ಚೆ ಮಾಡಿದ್ದೇವೆ. ಐತಿಹಾಸಿಕ ಮೈಶುಗರ್ ಕಾರ್ಖಾನೆ ಹೇಗೆ ಉಳಿಸಿಕೊಳ್ಳಬೇಕು ಎಂದು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು, ರೈತರಿಗೆ ಅನುಕೂಲ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಸಭೆ ಮಾಡಿದ್ದೇವೆ. ಹೊಸ ಕಾರ್ಖಾನೆ ಆರಂಭಿಸಬೇಕಾ ಅಥವಾ ಇರುವ ಕಾರ್ಖಾನೆಗೆ ಹೊಸ ವ್ಯವಸ್ಥೆ ಕಲ್ಪಿಸುವುದೇ ಎಂದು ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

“10 ಸಾವಿರ ಟಿಸಿಡಿ ಮಾಡುವುದು ನಮ್ಮ ಮುಂದೆ ಇರುವ ಆಯ್ಕೆ. ಇದನ್ನು ಮಾಡಿದರೆ ಬೇಕಾಗಿರುವ ಕಬ್ಬನ್ನು ಎಲ್ಲಿಂದ ತರುವುದು? ಬೆಳೆ ಪ್ರಮಾಣ ಎಷ್ಟಿದೆ? ಎಂದು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಈಗಿರುವ 5 ಸಾವಿರ ಟಿಸಿಡಿ ಸಂಪೂರ್ಣವಾಗಿ ನಡೆದು ಅಲ್ಲಿ ಎಥೆನಾಲ್ ಘಟಕ ಸೇರಿದಂತೆ ಎಲ್ಲವೂ ಕಾರ್ಯಾರಂಭವಾಗಿ ಸಂಸ್ಥೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು. ನಾವು ದೊಡ್ಡ ಕಾರ್ಖಾನೆ ಮಾಡುವುದು ದೊಡ್ಡದಲ್ಲ. ಅದಕ್ಕೆ ತಕ್ಕಂತೆ ರೈತರು ಕಬ್ಬು ಬೆಳೆಯಲು ಉತ್ತೇಜನ ನೀಡಬೇಕು” ಎಂದು ತಿಳಿಸಿದರು.

“ನಮಗಿರುವ ವರದಿ ಪ್ರಕಾರ ಅಕಾಲಿಕ ಮಳೆಯಿಂದಾಗಿ ರೈತರು ಕಬ್ಬು ಬೆಳೆಯುವುದನ್ನು ಬಿಟ್ಟು ಬೇರೆ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. 2 ಸಾವಿರ ರೈತರು ಕಬ್ಬು ಬೆಳೆಗೆ ಮುಂದಾಗಿದ್ದಾರೆ. ಇದಕ್ಕೆ ಏನು ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಜಿಲ್ಲೆಯಲ್ಲಿ ಈ ಕಾರ್ಖಾನೆ ಜತೆಗೆ ಇನ್ನು ಐದಾರು ಕಾರ್ಖಾನೆಗಳಿವೆ. ಎಲ್ಲವೂ ಸುಸ್ಥಿರವಾಗಿರಬೇಕು” ಎಂದರು.

5 ಸಾವಿರ ಟಿಸಿಡಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಬೇಕಾಗಿರುವ ಅಗತ್ಯ ಕ್ರಮ ಕೈಗೊಳ್ಳಿ ಎಂದು ತಾಂತ್ರಿಕ ಸಮಿತಿ ತಿಳಿಸಿದೆ. ಹೀಗಾಗಿ ಈಗ ಇರುವ ಘಟಕ ಆರ್ಥಿಕವಾಗಿ ಗಟ್ಟಿಯಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ರೈತರಿಗೆ ಬೆಳೆಗೆ ತಕ್ಕ ಬೆಲೆ ಸಿಗುವಂತಾಗಬೇಕು. ರೈತರು ನಿರಂತರವಾಗಿ ಕಬ್ಬು ಬೆಳೆಯುವಂತೆ ಮಾಡಬೇಕು. ಮಧ್ಯೆ ಬರಗಾಲ ಬಂದು ಬೆಳೆ ನಿಲ್ಲುವಂತೆ ಆಗಬಾರದು” ತಿಳಿಸಿದರು.

ತಮಿಳುನಾಡಿಗೆ 149 ಟಿಎಂಸಿ ನೀರು ಹರಿದಿದೆ:

“ಇನ್ನು ಕಾವೇರಿ ನೀರು ಹರಿಬಿಡುವ ವಿಚಾರವಾಗಿ, ಈಗ ನಾವು ಬಿಳಿಗುಂಡ್ಲುವಿಗೆ 50 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ 96 ಟಿಎಂಸಿ ಹೆಚ್ಚುವರಿಯಾಗಿ ನೀರು ಹರಿಸಿದ್ದೇವೆ. ತಮಿಳುನಾಡು ಪಾಲಿನ 177 ಟಿಎಂಸಿ ನೀರಿನ ಪೈಕಿ ಈಗಾಗಲೇ 149 ಟಿಎಂಸಿ ನೀರನ್ನು ಹರಿಸಲಾಗಿದೆ. ಈಗ ನಮ್ಮ ಭಾಗದಲ್ಲಿ ಎಲ್ಲೆಲ್ಲಿ ಕೆರೆಗಳನ್ನು ತುಂಬಿಸಲು ಸಾಧ್ಯವೋ ಎಲ್ಲಾ ಕೆರೆ ತುಂಬಿಸಲು ಸೂಚನೆ ನೀಡಲಾಗಿದೆ. ಕೆರೆ ತುಂಬಿಸಲು ಇರುವ ಅಡಚಣೆ ನಿವಾರಣೆಗೂ ಸೂಚನೆ ನೀಡಿದ್ದೇನೆ. ನಮ್ಮ ರೈತರು ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಸಲಹೆಯಂತೆ ಬೆಳೆಗಳನ್ನು ಹಾಕಬೇಕು ಎಂದು ರೈತರಲ್ಲಿ ಮನವಿ ಮಾಡುತ್ತೇನೆ” ತಿಳಿಸಿದರು.

ಮೇಕೆದಾಟು ವಿಚಾರದಲ್ಲಿ ಕಾನೂನು ರಕ್ಷಣೆ ಸಿಗಲಿದೆ, ಬುಡಬುಡಿಕೆ- ಯೂಟರ್ನ್ ಮಾತುಗಳ ಅಗತ್ಯವಿಲ್ಲ

ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿಕೊಳ್ಳುವ ಮೇಕೆದಾಟು ಯೋಜನೆ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ದೊಡ್ಡವರ ಸುದ್ದಿ ಈಗ ಬೇಡ, ಅವರು ಅನುಮತಿ ಕೊಡಿಸುವ ಅವಶ್ಯಕತೆ ಇಲ್ಲ. ಕಾನೂನಿದೆ, ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ. ಇಲ್ಲಿ ಬುಡುಬುಡಿಕೆ ಮಾತು, ಯೂಟರ್ನ್ ಮಾತಿನ ಅಗತ್ಯವಿಲ್ಲ. ಅವರ ಈ ಮಾತುಗಳನ್ನು ನೋಡಿದ್ದೇವೆ. ಐದು ನಿಮಿಷದಲ್ಲಿ ಅನುಮತಿ ಕೊಡಿಸುತ್ತೇನೆ ಎಂದು ಹೇಳಿದ್ದನ್ನು ನಾವು ಮಂಡ್ಯದಲ್ಲಿ ತಿಳಿಸಿದ್ದೇವೆ. ಈ ರೀತಿ ಹೇಳಲು ಮೂರ್ಖನೇ ಎಂದು ಹೇಳಿರುವುದನ್ನು ನೋಡಿದ್ದೇವೆ. ಕಾನೂನು ನಮಗೆ ಈ ವಿಚಾರದಲ್ಲಿ ರಕ್ಷಣೆ ನೀಡಲಿದೆ. ಕೇಂದ್ರ ಸರ್ಕಾರಕ್ಕೆ ಒಂದು ಅಧಿಕಾರವಿದ್ದು, ಪ್ರಧಾನಮಂತ್ರಿ ಹಾಗೂ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಇವರು ಯಾವತ್ತೂ ರೈತರ ಪರವಾಗಿ ನಿಂತಿಲ್ಲ. ಖಾಲಿ ಮಾತನಾಡುತ್ತಿದ್ದಾರೆ. ಅವರ ಬದುಕಿನಲ್ಲಿ ರೈತರ ಪರವಾಗಿ ನಿಂತ ಒಂದು ಉದಾಹರಣೆ ಇಲ್ಲ. ಸದ್ಯಕ್ಕೆ 10 ಸಾವಿರ ಜನರಿಗೆ ಉದ್ಯೋಗ ನೀಡುವ ಕಾರ್ಖಾನೆ ಮಾಡುವುದಾಗಿ ಹೇಳಿದ್ದು, ಅದನ್ನು ಮಾಡಲಿ. ನಾವು ಸಹಕಾರ ನೀಡುತ್ತೇವೆ ಎಂದು ಹೇಳುತ್ತೇನೆ. ಅವರು ಮೇಕೆದಾಟು ಪಾದಯಾತ್ರೆ ಮಾಡಿದಾಗಲೂ ಬೆಂಬಲ ನೀಡಲಿಲ್ಲ. ರೈತರ ಪರವಾದ ಯೋಜನೆಗಳಿಗೂ ಸಹಕಾರ ನೀಡಿದ ಉದಾಹರಣೆ ಇಲ್ಲ. ಅವರು ರೈತರ ಪರವಾಗಿ ನಿಂತಿದ್ದ ಉದಾಹರಣೆಗಳ ದಾಖಲೆ ಮಾಧ್ಯಮಗಳ ಬಳಿ ಇದ್ದರೆ ಅವುಗಳನ್ನು ನೀಡಿ. ಕಾವೇರಿ ವಿಚಾರದಲ್ಲಿ ಕಾನೂನಿನಲ್ಲಿ ಕರ್ನಾಟಕ ರಾಜ್ಯಕ್ಕೆ ಶಕ್ತಿ ಇದೆ. ನಮ್ಮ ಲೆಕ್ಕದ ಪ್ರಕಾರ 71 ಟಿಎಂಸಿಯಷ್ಟು ನೀರು ಸಮುದ್ರದ ಪಾಲಾಗಿದ್ದು, ನಮ್ಮ ಮೇಕೆದಾಟು ಅಣೆಕಟ್ಟಿನ ಸಾಮರ್ಥ್ಯ ಕೇವಲ 66 ಟಿಎಂಸಿ. ಸಮುದ್ರಕ್ಕೆ ಹೋಗುತ್ತಿರುವ ಹೆಚ್ಚುವರಿ ನೀರನ್ನು ಹೇಗೆ ಬಳಸಿಕೊಳ್ಳಬೇಕು ಇದಕ್ಕೆ ಅನುಮತಿ ನೀಡಿ ಎಂದು ಕೇಳುತ್ತಿದ್ದೇವೆ” ಎಂದು ತಿಳಿಸಿದರು.

ಕಾವೇರಿ ಆರತಿ ಕಾರ್ಯಕ್ರಮದ ವಿಚಾರವಾಗಿ ಕೇಳಿದಾಗ, “ನಮ್ಮ ಪ್ರವಾಸೋದ್ಯಮ, ಕೃಷಿ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಸಚಿವರು ಸೇರಿ ಪ್ರವಾಸ ಮಾಡಲಿದ್ದಾರೆ. ನಂತರ ವರದಿ ನೀಡಲಿದ್ದಾರೆ. ಇದರ ಜತೆಗೆ ಬೃಂದಾವನ ಉದ್ಯಾನ ಮೇಲ್ದರ್ಜೆಗೆ ಏರಿಸುವ ಯೋಜನೆಯಲ್ಲೇ ಕಾವೇರಿ ಆರತಿ ಕಾರ್ಯಕ್ರಮಕ್ಕೂ ಜಾಗ ಮೀಸಲಿಡಲು ಸೂಚನೆ ನೀಡಿದ್ದೇನೆ. ಇದಕ್ಕಾಗಿ ಕೆಲವು ಜಾಗವನ್ನು ಸೂಚಿಸಿದ್ದೇನೆ” ಎಂದು ತಿಳಿಸಿದರು.

ಮಂಡ್ಯದಲ್ಲಿ ವಿರೋಧ ಪಕ್ಷಗಳ ನಾಯಕರ ಹೇಳಿಕೆ ವಿಡಿಯೋ ಪ್ರದರ್ಶಿಸಿದ್ದಕ್ಕೆ ಕುಮಾರಸ್ವಾಮಿ ಅವರು ಸಿ.ಡಿ ಶಿವು ಎಂದು ಟೀಕೆ ಮಾಡಿದ ಬಗ್ಗೆ ಕೇಳಿದಾಗ, “ನಾನು ಇಂದಿರಾ ಗಾಂಧಿ ಹೆಸರಲ್ಲಿ ಚಿತ್ರ ಮಂದಿರ ಹೊಂದಿದ್ದೆ” ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button