Kannada NewsKarnataka NewsLatest

ಸಿಎಂ ಮತಯಾಚನೆಯಲ್ಲಿ ಯಶಸ್ವಿಯಾಗಲೆಂದು ಟೆಂಪಲ್ ರನ್

 

 ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ :

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಸ್ತುತ ವಿಧಾನಸಭಾ ಅಧಿವೇಶನ ದಲ್ಲಿ ಮಂಡಿಸಲು ಮುಂದಾಗಿರುವ ವಿಶ್ವಾಸ ಮತ ಯಾಚನೆಯಲ್ಲಿ ಯಶಸ್ಸುಗಳಿಸಲಿ ಎಂದು ಪ್ರಾರ್ಥಿಸಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಹೆಚ್. ಕೋನರಡ್ಡಿ ಅವರು ಶನಿವಾರ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿ ದೇವಿ ಸನ್ನೀಧಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.  ನಂತರ ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಾಲಯ ಹಾಗೂ ನವಲಗುಂದದಲ್ಲಿರುವ ಇತಿಹಾಸ ಪ್ರಸಿದ್ದ ನಾಗಲಿಂಗ ಅಜ್ಜನ ಮಠಕ್ಕೆ ತೆರಳಿ ನಾಗಲಿಂಗ ಅಜ್ಜನ ಗದ್ದುಗೆಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಜೆಡಿಎಸ್ ನೇತೃತ್ವದ ಮೈತ್ರಿ ಸರಕಾರಕ್ಕೆ ಎದುರಾಗಿರುವ ಎಲ್ಲ ವಿಘ್ನಗಳು ನಿವಾರಣೆಯಾಗಿ ಮೈತ್ರಿ ಸರಕಾರ ಸುಸೂತ್ರವಾಗಿ ನಡೆದುಕೊಂಡು ಹೋಗಲಿ ಎಂದು ಪ್ರಾರ್ಥಸಿರುವುದಾಗಿ ತಿಳಿಸಿದರು.


ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಆಪರೇಶನ್ ಕಮಲದ ಮೂಲಕ ಆಡಳಿತ ಯಂತ್ರ ಕುಸಿಯುವಂತೆ ಮಾಡುತ್ತಿದೆ. ಅಲ್ಲದೆ, ಮುಖ್ಯಮಂತ್ರಿಗಳ ಬಗ್ಗೆ ಹಗುರವಾಗಿ ಮಾತನಾಡುವುದನ್ನು ರೂಢಿಸಿಕೊಂಡಿದ್ದಾರೆ. ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ತಿಳಿಸಿದರು.
ಈ ಬಾರಿಯೂ ಕೂಡ ಸಮ್ಮಿಶ್ರ ಸರಕಾರಕ್ಕೆ ಎದುರಾಗಿರುವ ಸಂಕಷ್ಟ ನಿವಾರಣೆಯಾಗಲಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಗಳಾಗಿ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು.
ಧರ್ಮಪತ್ನಿ ಪ್ರೇಮಾ ಕೋನರಡ್ಡಿ, ಕುಟುಂಬ ಸದಸ್ಯರು ಹಾಗೂ ಹಲವು ಜೆಡಿಎಸ್ ಮುಖಂಡರು ಸಾಥ್ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button