Latest

ಬೆಂಗಳೂರು ಗಲಭೆಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕಠಿಣ ಕ್ರಮ ಕೈಗೊಳ್ಳದಿರುವುದೇ ಕಾರಣ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಬೆಂಗಳೂರು ಗಲಭೆ ಪೂರ್ವ ನಿಯೋಜಿತ ಕೃತ್ಯ. ಪೋಸ್ಟ್ ನೆಪದಲ್ಲಿ ಗಲಭೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ? ಏಕಾಏಕಿ ಜನರು ಹೇಗೆ ಸೇರಿದರು, ಪೆಟ್ರೋಲ್ ಬಾಂಬ್‍ಗಳು, ಕಲ್ಲುಗಳು ಎಲ್ಲಿಂದ ಬಂದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಗಲಭೆಯಲ್ಲಿ ಎಸ್‍ಡಿಪಿಐ, ಕೆಎಫ್‍ಡಿ ಸಂಘಟನೆಯ ಕೈವಾಡ ಇದೆ ಎನ್ನುವ ಮಾತುಗಳಿದ್ದು, ಇವುಗಳನ್ನು ನಿಷೇಧ ಮಾಡಬೇಕು.ಘಟನೆ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ತಿಳಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಕಟೀಲ್, ಸಿದ್ದರಾಮಯ್ಯ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮಾತ್ರ ಇದ್ದರು. ಆದರೆ ಮುಖ್ಯಮಂತ್ರಿವಾಗಿ ವರ್ತನೆ ಮಾಡಲಿಲ್ಲ. ಅಧಿಕಾರದಲ್ಲಿ ಇದ್ದಾಗ ಗಲಭೆಗಳು ಆದಾಗ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಇವತ್ತು ಇದು ನಡೆಯುತ್ತಿರಲಿಲ್ಲ. 21 ಹಿಂದೂ ಕಾರ್ಯಕರ್ತರ ಹತ್ಯೆ ಆದಾಗ ಕ್ರಮ ತಗೆದುಕೊಳ್ಳಲಿಲ್ಲ. ಎಸ್‍ಡಿಪಿಐ, ಸಿಮಿ ಸಂಘಟನೆಯವರ ಮೇಲಿನ ಕೇಸ್ ಗಳಿಗೆ ಬಿ ರಿಪೋರ್ಟ್ ಹಾಕಿದರು. ಇದರಿಂದ ಅವರಿಗೆ ಧೈರ್ಯ ಬಂತು, ಆ ಧೈರ್ಯವೇ ಇವತ್ತು ಇದನ್ನು ಮಾಡಿಸುತ್ತಿದೆ ಎಂದು ಗುಡುಗಿದರು.

ಈ ಘಟನೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ನಾನು ಹೇಳಲ್ಲ. ಆದರೆ ಸಿದ್ದರಾಮಯ್ಯ ಸರಿಯಾಗಿ ಆಡಳಿತ ನೀಡದಿರುವುದು, ಅಂದು ಕಠಿಣ ಕ್ರಮ ತೆಗೆದು ಕೊಳ್ಳದಿರುವುದು, ಈ ಜನರಿಗೆ ಧೈರ್ಯ ಬಂದಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿದ್ದು, ಪಾದರಾಯನಪುರ ಗಲಭೆ ಆದಾಗ ಜಮೀರ್ ಅಹಮ್ಮದ್ ಮೆರವಣಿಗೆ ಮಾಡಿದರು. ಡಿಜೆ ಹಳ್ಳಿ ಗಲಭೆಯಲ್ಲಿ ಸತ್ತವರನ್ನು ಅಮಾಯಕರು ಅಂತಾರೆ ಎಂದು ಆರೋಪಿಸಿದರು.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ್, ಫೋಸ್ಟ್ ಹಾಕಿರುವ ನವೀನ್ ಯಾವ ಪಕ್ಷ? ನವೀನ್ ಕಾಂಗ್ರೆಸ್ ಪಕ್ಷದವನು ಎನ್ನುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ ಹಾಕಿದವರು ಯಾರು? ಶಾಸಕರು ದಲಿತ ಸಮುದಾಯಕ್ಕೆ ಸೇರಿದವರು ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್ ದಲಿತರ ಪರವೇ ಅಥವಾ ಭಯೋತ್ಪಾದಕರ ಪರವೇ ಎಂಬುದನ್ನು ಉತ್ತರಿಸಬೇಕು ಎಂದು ಕಿಡಿಕಾರಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button