*ಕರ್ನಾಟಕ ಬಂದ್ಗೆ ನಮ್ಮ ಬೆಂಬಲ ಇಲ್ಲ: ಪ್ರವೀಣ್ ಶೆಟ್ಟಿ*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿರುವ ‘ಕರ್ನಾಟಕ ಬಂದ್ಗೆ ತಮ್ಮ ಸಂಘಟನೆಯ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತಾನಡಿದ ಅವರು, ಬಂದ್ ಆಚರಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಹೀಗಾಗಿ ಪ್ರಸ್ತುತ ಪರಿಸ್ಥಿತಿಯಲ್ಲಿ ಬಂದ್ ನಡೆಸುವುದು ಬೇಡ. ಬದಲಿಗೆ ವಿಭಿನ್ನ ರೀತಿಯಲ್ಲಿ ಹೋರಾಟ ರೂಪಿಸೋಣ ಎಂದು ವಾಟಾಳ್ ನಾಗರಾಜ್ ಅವರಿಗೆ ಮನವಿ ಮಾಡುವುದಾಗಿ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.
ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಬಂದ ಆದೇಶವನ್ನು ಖಂಡಿಸಿ ಆಸಕ್ತಿ ವಹಿಸಿ ಆಗಸ್ಟ್ 13 ರಂದು ಬಂದ್ಗೆ ಕರೆ ನೀಡಲಾಗಿತ್ತು. ಆದರೆ, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಮುಖ್ಯಮಂತ್ರಿಗಳು ಹಾಗೂ ಸಚಿವರು ಭರವಸೆ ನೀಡಿದ್ದಾರೆ. ಅಲ್ಲದೆ, ಪ್ರಸ್ತುತ ಮಳೆಯಾಗುತ್ತಿರುವ ಪರಿಸ್ಥಿತಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬಂದ್ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಕನ್ನಡಿಗರಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಈ ಸೂಕ್ಷ್ಮ ವಿಚಾರದಲ್ಲಿ ಪ್ರಧಾನಿಯವರು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಹಾಗೂ ಸುಪ್ರೀಂ ಕೋರ್ಟ್ಲ್ಲಿ ಕರ್ನಾಟಕಕ್ಕೆ ಸೂಕ್ತ ನ್ಯಾಯ ಸಿಗಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರ ಅಥವಾ ಮುಖ್ಯಮಂತ್ರಿಗಳ ಕಡೆಯಿಂದ ಬಂದ್ ಹಿಂಪಡೆಯಲು ಯಾವುದೇ ಒತ್ತಡ ಬಂದಿಲ್ಲ ಎಂದು ಪ್ರವೀಣ್ ಶೆಟ್ಟಿ ಸ್ಪಷ್ಟಪಡಿಸಿದರು. “ನಾವು ಯಾರ ಮನೆಗೂ ಫಂಡ್ ಕೇಳಲು ಹೋಗುವುದಿಲ್ಲ. ನಮಗೆ ಯಾರ ಭಯವೂ ಇಲ್ಲ. ಸಾರ್ವಜನಿಕರ ಹಿತದೃಷ್ಟಿ ಒಂದನ್ನೇ ಮನಸ್ಸಿನಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ” ಎಂದು ಅವರು ತಿಳಿಸಿದರು.




