
ಪ್ರಗತಿವಾಹಿನಿ ಸುದ್ದಿ : ಕೆಲ ದಿನಗಳ ಹಿಂದೆಯಷ್ಟೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಖಾತೆ ಸಚಿವ ಮಧು ಬಂಗಾರಪ್ಪ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಆ ಭಾಗಕ್ಕೆ ಆದಷ್ಟು ಬೇಗ 5 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದರು. ಅದರ ಬೆನ್ನಲೆ ಸರ್ಕಾರಿ ಕಿರಿಯ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿದೆ.
ಇದೀಗ ಸರ್ಕಾರದ ಆದೇಶದಂತೆ 1ರಿಂದ 5ನೇ ತರಗತಿ ವರೆಗೆ 4,424 ಶಿಕ್ಷಕರು(ಪಿಎಸ್ಟಿ), 6ರಿಂದ 8ನೇ ತರಗತಿಗೆ 78 ಶಿಕ್ಷಕರು (ಜಿಪಿಟಿ), ದೈಹಿಕ ಶಿಕ್ಷಣ ಶಿಕ್ಷಕ 380 ಹುದ್ದೆಗಳು ಸೇರಿದಂತೆ ಒಟ್ಟು 5267 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ 2024-25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಲಾಗಿದೆ.
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ಪೂರ್ವ ಪಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಸದರಿ ಹುದ್ದೆಗಳಿಗೆ ತಗಲಬಹುದಾದ ಆರ್ಥಿಕ ಆಯವ್ಯಯವನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ ಎಂದು ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ