NationalPolitics

*ಸದ್ಯಕ್ಕಿಲ್ಲ ಉಪಚುನಾವಣೆ ಎಂದ ಆಯೋಗ: ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಇಂದು ಉಪಚುನಾವಣೆ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿತ್ತು. ಆದರೆ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕವನ್ನಷ್ಟೇ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ ಎಂದಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಜಮ್ಮು-ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟಿಸಿದರು. ಈ ವೇಳೆ ಯಾವುದೆ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರದ ಉಪಚುನಾವಣೆ ಸದ್ಯಕ್ಕಿಲ್ಲ ಎಂದಿದ್ದಾರೆ.

ಕರ್ನಾಟಕ ಸೇರಿದಂತೆ 46 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿತ್ತು. ಆದರೆ ಕೆಲ ರಾಜ್ಯಗಳಲ್ಲಿ ಹವಾಮಾನ ಸೂಕ್ತವಾಗಿಲ್ಲ. ಕೇರಳ, ಅಸ್ಸಾಂ, ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತದಿಂದಾಗಿ ಚುನಾವಣೆ ನಡೆಸುವ ಪರಿಸ್ಥಿತಿ ಇಲ್ಲ. ಅಲ್ಲಿನ ಪರಿಸ್ಥಿತಿ ಸುಧಾರಣೆಯಾದ ಬಳಿಕ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಯಾವುದೇ ಕ್ಷೇತ್ರಕ್ಕೆ ಜನಪ್ರತಿನಿಧಿಗಳು ರಾಜೀನಾಮೆ ನೀಡಿ ತೆರವಾದ ಸ್ಥಾನಕ್ಕೆ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು. ಹಾಗಾಗಿ ಡಿಸೆಂಬರ್ ಒಳಗಾಗಿ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button