Latest

ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಯೇ ಇಲ್ಲ -ಸತೀಶ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

 ತಾವು ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಯೇ ಇಲ್ಲ. ಸ್ವಾತಂತ್ರ್ಯ ಹೋರಾಟದ ವಿಚಾರಗಳನ್ನೂ ನಾನು ಕಡೋಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಪ್ರಸ್ತಾಪಿಸಿಲ್ಲ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

Home add -Advt

ಸ್ವಾತಂತ್ರ್ಯ ಪೂರ್ವದಲ್ಲಿ ಹೋರಾಟ ನಡೆಸಿದ ಮಹನೀಯರ ಬಗ್ಗೆ ನನಗೆ ಗೌರವವಿದೆ. ಆದರೆ ಸದ್ಯದ ಸ್ಥಿತಿಯಲ್ಲಿ ದೇಶದ ಗಡಿ ಕಾಯುವವರ ವಿಚಾರವನ್ನು ಭಾಷಣದಲ್ಲಿ ಪ್ರಸ್ತಾಪಿಸಿದ್ದೆ. ಗಡಿ ಕಾಯುವವರಲ್ಲಿ ಹಿಂದುಳಿದವರು , ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೇಲ್ವರ್ಗದವರು ಕಮ್ಮಿ ಎಂದು ವಾಸ್ತವ ಸ್ಥಿತಿಯನ್ನು ಭಾಷಣದಲ್ಲಿ ಉಲ್ಲೇಖಿಸಿದ್ದೇನೆ. ಇದನ್ನೇ ತಪ್ಪಾಗಿ ಅರ್ಥೈಸಿಕೊಂಡು ಬೇರೆ ರೀತಿಯ ಸಂದೇಶ ಹೋಗುವಂತೆ ಮಾಡುತ್ತಿರುವ ರಾಜ್ಯ ಬಿಜೆಪಿ ವಕ್ತಾರ ಎಂ.ಬಿ. ಜಿರಲಿ, ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಹನುಮಂತ ಕೊಟಬಾಗಿ ಅವರ ನಿಲುವನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.

ಬ್ರಾಹ್ಮಣರ ಕುರಿತು ಅವಹೇಳನಕಾರಿಯಾಗಿ ಮಾತನಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನನ್ನ ಹೇಳಿಕೆಯ ಸತ್ಯಾಸತ್ಯತೆಯನ್ನು ಅವಲೋಕನ ಮಾಡಿಕೊಳ್ಳಬೇಕು . ಈ ವಿಚಾರ ಕುರಿತಂತೆ ಬಹಿರಂಗ ಚರ್ಚೆಗೆ ಸಿದ್ದ. ಇಲ್ಲಸಲ್ಲದ ಹೇಳಿಕೆ ನೀಡುವ ಬದಲು ಎಲ್ಲರೂ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.

ಬಹಿರಂಗ ಚರ್ಚೆಗೂ ಬಾರದೇ, ಇಲ್ಲದ ವಿವಾದವನ್ನು ಇನ್ನಷ್ಟು ಜಟಿಲಗೊಳಿಸಲು ಪ್ರಯತ್ನಿಸಿದರೆ ಮಾನಹಾನಿ ಖಟ್ಲೆ ಸೇರಿದಂತೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.

(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button