*88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಕ್ರಿಮಿನಲ್ ಕೇಸ್ ದಾಖಲು: ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ*

ಕಠಿಣ ಕ್ರಮಕ್ಕೆ ಪರಮೇಶ್ವರ್ ಸೂಚನೆ
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಾಜ್ಯದ ಪೊಲೀಸರು/ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಶರವಣ ಟಿ. ಎ. ಅವರ ಪ್ರಶ್ನೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು/ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್. ಐ. ಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆoಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದರು.
ರಾಜ್ಯದ ಪೊಲೀಸರು/ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ.
ಇಂತಹ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಕರ್ತವ್ಯದ ಮೇಲೆ ಉನ್ನತಾಧಿಕಾರಿಗಳು ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ.
ಪೊಲೀಸ್ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಲು ಸಭೆಗಳನ್ನು ಕರೆದು ಉನ್ನತಾಧಿಕಾರಿಗಳಿಂದ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ದುರ್ನಡತೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ಜಿಲ್ಲಾ ಮಟ್ಟದ ಉನ್ನತಾಧಿಕಾರಿಗಳು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ.
ಎಲ್ಲಾ ಘಟಕದ ಅಧಿಕಾರಿಗಳಿಂದ ಅಧೀನದ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರುಗಳ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯತವಾಗಿ ನಡೆಸಲಾಗುತ್ತಿದೆ.
ನೈತಿಕ ಮಾನದಂಡಗಳು, ಕಾನೂನು ಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಚಾರ / ಅಪರಾಧಗಳ ಕುರಿತು ಜಾಗೃತಿ ಮೂಡಿಸಲು ತರಬೇತಿ ಕಾರ್ಯಕ್ರಮಗಳ ಮೂಲಕ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ತಿಳುವಳಿಕೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.



