*ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಸಂಗ್ರಹ, ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು*

ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಮೂರ್ತಿಗಳ ಬಗ್ಗೆ ಖಡಕ್ ಎಚ್ಚರಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಪಿಒಪಿ ಗಣೇಶ ಮೂರ್ತಿಗಳ ತಯಾರಿ, ಸ<ಗ್ರಹ, ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಿಳಿಯಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿಡ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಸಂಗ್ರಹಣೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ನಿಯಮ ಉಲ್ಲಂಘಿಸಿ ಮೂರ್ತಿಗಳನ್ನು ತಯಾರಿಸುವ ಅಥವಾ ಮಾರಾಟ ಮಾಡುವವರಿಗೆ ನೋಟಿಸ್ ಜಾರಿಗೊಳಿಸಿ, ಮೂರ್ತಿಗಳನ್ನು ವಶಪಡಿಸಿಕೊಂಡು ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಒಂದು ಬಾರಿ ಬಳಕೆ ಮಾಡುವಂತಹ ಪ್ಲಾಸ್ಟಿಕ್ ಘಟಕಗಳನ್ನು ಪತ್ತೆ ಹಚ್ಚಲು ಅಗತ್ಯ ತಾಂತ್ರಿಕ ಸಾಮರ್ಥ್ಯವಿರುವ ಸೂಕ್ತ ಸರ್ಕಾರಿ ಸಂಸ್ಥೆಯನ್ನು ಗುರುತಿಸಬೇಕು. ಅಂತಹ ಘಟಕಗಳ ಪಟ್ಟಿ ಸಿದ್ಧಪಡಿಸಿ, ಉತ್ಪಾದನೆಯನ್ನು ತಕ್ಷಣ ನಿಲ್ಲಿಸುವಂತೆ ಅಧಿಕಾರಿಗಳು ನೋಟಿಸ್ ನೀಡಬೇಕು ಎಂದು ಸೂಚಿಸಲಾಗಿದೆ.
ಆದೇಶ ಪಾಲಿಸದ ಘಟಕಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಂದ ಪ್ಲಾಸ್ಟಿಕ್ ತಯಾರಿಕಾ ಘಟಕಗಳು ಹಾಗೂ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಅಗತ್ಯವಿರುವ ವಿದ್ಯುತ್ ಸಂಪರ್ಕ ಮತ್ತು ಬಳಕೆಗೆ ಸಂಬಂಧಿಸಿದ ವಿವರಗಳನ್ನು ನಿಯಮಾನುಸಾರ ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.




