
ಪ್ರಗತಿವಾಹಿನಿ ಸುದ್ದಿ: ಬಹುಭಾಷಾ ನಟ, ನಿರ್ದೇಶಕ ಪ್ರಕಾಶ್ ರಾಜ್ ಗೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ 48ನೇ ಎಸಿಜೆಎಂ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಪ್ರಕಾಶ್ ರಾಜ್ ಹೆಸರಲ್ಲಿ ನಾಲ್ಕು ಗುರುತಿನ ಚೀಟಿ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಮನ್ಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಬೆಂಗಳೂರಿನ ಎಸಿಜೆಎಂ ಕೋರ್ಟ್ ಪ್ರಕಾಶ್ ರಾಜ್ ಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಪ್ರಕಾಶ್ ರಾಜ್ ಕರ್ನಾಟಕ, ತಮಿಳುನಾಡು, ತೆಲಂಗಾಣ ಸೇರಿದಂತೆ ನಾಲ್ಕು ಕಡೆಗಳಲ್ಲಿ ಗುರುತಿನ ಚೀಟಿ ಹೊಂದಿದ್ದಾರೆ. ಈ ಬಗ್ಗೆ 2019ರಲ್ಲಿ ವಕೀಲ ದಿಲೀಪ್ ಕುಮಾರ್ ಎಂಬುವವರು ಹಲಸೂರು ಗೇಟ್ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದರು. ಬಳಿಕ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಎಲ್ಲಿಯೂ ಕ್ರಮ ಕೈಗೊಳ್ಳದ ಕಾರಣ ದಿಲೀಪ್ ಅವರು ಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕಾಶ್ ರಾಜ್ ಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಪ್ರಕಾಶ್ ರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಕೋರ್ಟ್ ಇದೀಗ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.



