Karnataka NewsLatestPolitics

*ಹೆಸರು, ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರ: ಬೆಂಬಲ ಬೆಲೆಯಲ್ಲಿ ಖರೀದಿಸಲು ಸೂಚನೆ*

ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ರಾಜ್ಯದ ರೈತರ ನೆರವಿಗೆ ಧಾವಿಸಿದ್ದು, ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಸರು ಕಾಳು ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲಗೆ ₹ 8682 ( MSP) ದರದಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರಯದೇ ತೊಂದರೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿಂತಿದೆ ಎಂದಿದ್ದಾರೆ ಜೋಶಿ.

ಕೇಂದ್ರ ಸರ್ಕಾರ, MSP ಅಡಿ ಹೆಸರು ಕಾಳು ಖರೀದಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ರಾಜ್ಯದ ರೈತರ ಹೆಸರಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ Price Support Scheme (PSS) ಅಡಿ ಖರೀದಿಗೆ ಅನುಮತಿ ನೀಡಿದೆ. 2215 MT ಹೆಸರುಕಾಳನ್ನು Rs.8682 ಪ್ರತಿ ಕ್ವಿಂಟಾಲ್ ನಂತೆ ಖರೀದಿ ಮಾಡಲಾಗುವುದು ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ.

ಸೂರ್ಯಕಾಂತಿ ಖರೀದಿಗೂ ಅನುಮೋದನೆ:
ಅದೇ ರೀತಿ ಸೂರ್ಯಕಾಂತಿ ಬೆಳೆಯನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 13210 MT ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ, ಕೇಂದ್ರಕ್ಕೆ ಆಗಸ್ಟ್ 21ರಂದು ಪತ್ರ ಬರೆದು ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣವರನ್ನು ಭೇಟಿ ಮಾಡಿ ಚರ್ಚಿಸಿ, ರಾಜ್ಯದ ಹೆಸರಕಾಳು ಮತ್ತು ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೆ. ಇದಕ್ಕೆ ತಕ್ಷಣವೇ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡುವಂತೆ ಸೂಚಿಸಿದರು. ಕೇಂದ್ರ ಸರ್ಕಾರ ಆಗಸ್ಟ್ 22ರಂದೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ತ್ವರಿತವಾಗಿ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತ್ವರಿತವಾಗಿ ರಾಜ್ಯದೆಲ್ಲೆಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ, ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button