LatestNationalPolitics

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ: ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – *ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ?: ಮೋದಿಯವರ ಸರಣಿ ಸುಳ್ಳುಗಳು ಎಂದು ಪಟ್ಟಿ ಮಾಡಿ ಸಿ.ಎಂ.ಸಿದ್ದರಾಮಯ್ಯ ಜನರನ್ನು ಪ್ರಶ್ನಿಸಿದ್ದಾರೆ.

KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಮಾತನಾಡಿದರು. 

*ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ: ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ* 

*ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ- ಬಿಜೆಪಿಯವರಂತೆ ಸುಳ್ಳು ಹೇಳಲ್ಲ: ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.‌

ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ಎಂದು ಪ್ರಧಾನಿ ನರೇಂದ್ರ ಮೋದಿಯವರ ಆಶ್ವಾಸನೆಗಳನ್ನು ಪಟ್ಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. 

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು. 

ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸುತ್ತಿದೆ. ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ  ದಾಖಲೆಗಳನ್ನು ಮಂಡಿಸಿ ಎಂದು ಕರೆ ನೀಡಿದರು. 

ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ ,ನಿರ್ಲಜ್ಜದಿಂದ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ‌ ಕಾಂಗ್ರೆಸ್ ಸರ್ಕಾರ. ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಿ ಎಂದು ಕರೆ ನೀಡಿದರು. 

ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರ ವಾಪಾಸ್ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ-ಜೆಡಿಎಸ್ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಿ ಎಂದು ಕರೆ ನೀಡಿದರು. 

*ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು:*

ನೀವೆಲ್ಲರೂ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಯಭಾರಿಗಳು ನೀವು.

ನಾನು ಹಾಗೂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿ ಅಲ್ಲಿ ನಾವು ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಘೋಷಣೆ ಮಾಡಿದೆವು. ಈ ಯೋಜನೆಯಿಂದ 1.50 ಕೋಟಿ ಮನೆಗಳಿಗೆ ಪ್ರಯೋಜನವಾಗುತ್ತಿದೆ.

ಇನ್ನು ಹಸಿವು ಮುಕ್ತ ರಾಜ್ಯ ಮಾಡಲು ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ನೀಡುವ ಘೋಷಣೆ ಮಾಡಿದೆವು. ನಾವು ಅಕ್ಕಿ ಖರೀದಿ ಮಾಡಲು ಕೇಂದ್ರಕ್ಕೆ ಮನವಿ ಮಾಡಿದರೆ, ಕೇಂದ್ರ ಸರ್ಕಾರ ನಿರಾಕರಿಸಿತು. ಹೀಗಾಗಿ ನಮ್ಮ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣವನ್ನು ನೀಡುತ್ತಿದ್ದೇವೆ.

ಬಿಜೆಪಿ ಆಡಳಿತದಲ್ಲಿ ಪೆಟ್ರೋಲ್ ಬೆಲೆ 70ರಿಂದ 110ಕ್ಕೆ ಏರಿತು. ಅಡುಗೆ ಅನಿಲ 410ರಿಂದ 1100 ರೂಪಾಯಿ ಆಯಿತು. ಅಡುಗೆ ಎಣ್ಣೆ 200ರ ಗಡಿ ದಾಟಿತು. ಹೀಗಾಗಿ ನಾವು ಬೆಲೆ ಏರಿಕೆ ಸಮಯದಲ್ಲಿ ಮಹಿಳೆಯರಿಗೆ ನೆರವಾಗಬೇಕು ಎಂದು ಚರ್ಚೆ ಮಾಡಿ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದೆವು. ಇಂದು 1.33 ಕೋಟಿ ಮನೆಯೊಡತಿಯರಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡಲಾಗುತ್ತಿದೆ.

ಈ ಯೋಜನೆ ಘೋಷಣೆ ವೇಳೆ ಪ್ರಿಯಾಂಕಾ ಗಾಂಧಿ ಅವರ ಸಮ್ಮುಖದಲ್ಲಿ ನಮ್ಮ ಗ್ಯಾರಂಟಿ ಚೆಕ್ ಗೆ ನಾನು ಹಾಗೂ ಸಿದ್ದರಾಮಯ್ಯ ಅವರು ಸಹಿ ಹಾಕಿದೆವು.

ನಮ್ಮ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಮಂಗಳೂರಿನಲ್ಲಿ ರಾಹುಲ್ ಗಾಂಧಿ ಅವರು ಶಕ್ತಿ ಯೋಜನೆ ಘೋಷಣೆ ಮಾಡಿದರು. ಆಮೂಲಕ ರಾಜ್ಯದ ಎಲ್ಲೆಡೆ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಯಿತು.

ನಂತರ ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲು ಯುವನಿಧಿ ಯೋಜನೆ ಘೋಷಣೆ ಮಾಡಿ ಶಿವಮೊಗ್ಗದಲ್ಲಿ ಜಾರಿ ಮಾಡಿದೆವು. ಈ ಕಾರ್ಯಕ್ರಮಕ್ಕೆ 1 ಲಕ್ಷ ಯುವಕರು ಭಾಗವಹಿಸಿದ್ದರು. ಅಲ್ಲಿನ ಜನರನ್ನು ನೋಡಿದರೆ ಯಡಿಯೂರಪ್ಪನವರ ಮಗ ಗೆಲ್ಲುವುದು ಅಸಾಧ್ಯ ಎಂಬುದು ಖಚಿತವಾಗುತ್ತದೆ.

ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಬಡ ಕುಟುಂಬಗಳಿಗೆ ಮಾಸಿಕ 5-6 ಸಾವಿರ ಉಳಿತಾಯವಾಗುತ್ತದೆ. ಆಮೂಲಕ ಜನರ ಕೈಯಲ್ಲಿ ಹಣ ಹರಿದಾಡುವಂತೆ ಮಾಡಲಾಗಿದೆ. ಜನರ ಕೈಯಲ್ಲಿ ಹಣ ಹರಿದಾಡುವಂತೆ ಮಾಡುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ.

ನೀವು ಕಷ್ಟಪಟ್ಟು ಕೆಲಸ ಮಾಡಬೇಕು. ಮರಕ್ಕೆ ಬೇರು ಎಷ್ಟು ಮುಖ್ಯವೋ ಅದೇ ರೀತಿ ಮನುಷ್ಯನಿಗೆ ನಂಬಿಕೆ ಮುಖ್ಯ. ಕಾಂಗ್ರೆಸ್ ಪಕ್ಷ ನಿಮ್ಮನ್ನು ನಂಬಿದೆ. ನೀವು ಈ ನಂಬಿಕೆ ಉಳಿಸಿಕೊಳ್ಳಬೇಕು. ನಾವು ದೊಡ್ಡ ಹುದ್ದೆ ಕೊಟ್ಟಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಸಾಧ್ಯವಾದಷ್ಟು ಗೌರವ ಹಾಗೂ ಅಧಿಕಾರ ನೀಡುತ್ತಿದ್ದೇವೆ.

ಗ್ಯಾರಂಟಿ ಯೋಜನೆಗಳ ಜಾರಿಗೆ ಕರ್ನಾಟಕ ರಾಜ್ಯದ 3.71 ಲಕ್ಷ ಕೋಟಿ ಮೊತ್ತದ ಬಜೆಟ್ ನಲ್ಲಿ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಅಭಿವೃದ್ಧಿಗೆ 1.20 ಲಕ್ಷ ಕೋಟಿ ಮೀಸಲು ಇಟ್ಟಿದ್ದೇವೆ.

ನಮ್ಮ ಯೋಜನೆಗಳಿಂದ ದೇವಾಲಯಗಳಲ್ಲಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿ ಹುಂಡಿ ತುಂಬುತ್ತಿದೆ. ಮಹಿಳೆಯರು ನಿಮ್ಮ ಹೆಸರಲ್ಲಿ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

ಎಐಸಿಸಿ ನಾಯಕರು ಕೂಡ ಐದು ನ್ಯಾಯ ಯೋಜನೆಗಳನ್ನು ಘೋಷಿಸಿದ್ದು, ಈ ನ್ಯಾಯ ಯೋಜನೆಗಳಲ್ಲಿ ತಲಾ ಐದು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಿಳಾ ನ್ಯಾಯ ಯೋಜನೆಯಲ್ಲಿ ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮನೆಯೊಡತಿಯರಿಗೆ ವರ್ಷಕ್ಕೆ 1 ಲಕ್ಷ, ಕೇಂದ್ರದ ಹೊಸ ನೇಮಕಾತಿಗಳಲ್ಲಿ ಅರ್ಧದಷ್ಟು ಮಹಿಳೆಯರಿಗೆ ಮೀಸಲುಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ವೇತನದಲ್ಲಿ ಕೇಂದ್ರದ ಪಾಲು ದುಪ್ಪಟ್ಟು ಮಾಡಲಾಗುವುದು.

ರೈತ ನ್ಯಾಯದಲ್ಲಿ ಕಾನೂನು ಬದ್ಧ ಕನಿಷ್ಠ ಬೆಂಬಲ ಬೆಲೆ, ಕೃಷಿ ಕ್ಷೇತ್ರ ಜಿಎಸ್ಟಿ ಮುಕ್ತ. ಕೃಷಿ ಸಾಲ ಮನ್ನಾ ಆಯೋಗ ಸ್ಥಾಪನೆ.

ಶ್ರಮಿಕ ನ್ಯಾಯದಲ್ಲಿ ಕಾರ್ಮಿಕರಿಗೆ ಆರೋಗ್ಯದ ಹಕ್ಕು, ಕಾರ್ಮಿಕ ವಿರೋಧಿ ಕಾನೂನು ರದ್ದು, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ನಗರ ಉದ್ಯೋಗ ಖಾತ್ರಿ.  ಹೀಗೆ ಐದು ನ್ಯಾಯ ಯೋಜನೆಯಲ್ಲಿ 25 ಗ್ಯಾರಂಟಿ ಗಳನ್ನ ಘೋಷಣೆ ಮಾಡಲಾಗಿದೆ.

ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಪರವಾಗಿ ಯಾವುದೇ ಅಲೆ ಇಲ್ಲ.

ನಾವು ನಮ್ಮ ಊರುಗಳ ಬಡ ದೇವಾಲಯಗಳ ಅಭಿವೃದ್ಧಿಗೆ ಕಾನೂನು ತಂದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಈ ಕಾನೂನನ್ನು ಪರಿಷತ್ ನಲ್ಲಿ ಮಣಿಸಿದ್ದಾರೆ.

ಈಗ ಈ ಯೋಜನೆಗಳನ್ನು ಜಾರಿಗೊಳಿಸಲು ಈ ಅನುಷ್ಠಾನ ಸಮಿತಿ ಮಾಡಲಾಗಿದೆ. ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದ ಸಮಿತಿ ಮಾಡಿ ಅವರಿಗೆ ಕಚೇರಿ ಹಾಗೂ ಗೌರವಧನ ನೀಡಲಾಗುವುದು. ಇದರ ಜತೆಗೆ ಆರಾಧನ, ಶಿಕ್ಷಣ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗುತ್ತಿದೆ.

ನಾವು ನುಡಿದಂತೆ ನಡೆದು ನಿಮಗೆ ಶಕ್ತಿ ನೀಡಿದ್ದೇವೆ. ಈಗ ನೀವು ಪಂಚಾಯ್ತಿ ಮಟ್ಟದಲ್ಲಿ ತಂಡಗಳನ್ನು ರಚಿಸಿ ಮನೆ ಮನೆಗೆ ಹೋಗಿ ಜನರಿಗೆ ಈ ಯೋಜನೆ ತಲುಪಿಸಬೇಕು. ಆಮೂಲಕ ನಮಗೆ ನೀವು ಶಕ್ತಿ ನೀಡಬೇಕು.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ.

ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು, ತೆನೆ ಹೊತ್ತ ಮಹಿಳೆ ತೆನೆ ಬಿಸಾಡಿದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಪ್ರಬುದ್ಧವಾಯಿತು, ಕರ್ನಾಟಕ ಸಮೃದ್ಧವಾಯಿತು.

ನಾವು ಎಷ್ಟೇ ದೊಡ್ಡವರಾದರೂ ಕಾರ್ಯಕರ್ತರು. ಹೀಗಾಗಿ ನಾವು ಸ್ವಾಭಿಮಾನ ಬಿಡಬೇಕು. ನಮ್ಮ ಪಕ್ಷದ ಶಾಲು ತ್ರಿವರ್ಣ ಹೊಂದಿದೆ. ಈ ಶಾಲು ಹಾಕಿಕೊಳ್ಳುವ ಅವಕಾಶ ಕಾಂಗ್ರೆಸಿಗರಿಗೆ ಬಿಟ್ಟು ಬೇರೆಯವರಿಗೆ ಇಲ್ಲ.

ನೀವು ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲಿಲ್ಲವಾದರೆ ನೀವು ನಾಯಕರಲ್ಲ, ನೀವು ಕೆಲಸ ಮಾಡಿಲ್ಲ ಎಂದರ್ಥ. ಹೀಗಾಗಿ ನೀವು ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತನ್ನಿ, ಪಕ್ಷ ಬಲಪಡಿಸಿ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಸಿಎಂ ಡಿ.ಕೆ.ಶಿವಕುಮಾರ್, ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button