*ಆರ್.ಎಸ್.ಎಸ್.ನೋಂದಣಿ ಬಗ್ಗೆ ಮೋಹನ್ ಭಾಗವತ್ ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ಐಟಿ-ಬಿಟಿ ಸಚಿವರಾಗಿದ್ದಾಗಿನಿಂದೂ ಆರ್.ಎಸ್.ಎಸ್ ನೋಂದಣಿ ವಿಚಾರವಾಗಿ ಪ್ರಶ್ನಿಸುತ್ತಿದ್ದ ಪ್ರಿಯಾಂಕ್ ಖರ್ಗೆ ಇದೀಗ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಈ ವಿಚಾರವನ್ನು ಗಂಭೀರವಾಗಿ ಪರಗಣಿಸಿದ್ದು, ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ವಿವವರ ಕೇಳಿದ್ದಾರೆ.
ಮೋಹನ್ ಭಾಗವತ್ ಅವರುಗೆ ಪತ್ರ ಬೆರೆದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಆರ್.ಎಸ್.ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿದ್ದಾರೆ. ಇಷ್ಟು ದೊಡ್ಡ ಸಂಘಟನೆ ಯಾವ ಕಾನೂನಿನ ಆಧಾರದಲ್ಲಿ ನಿರ್ವಹಿಸುತ್ತಿದೆ? ಏಕೆ ನೋಂದಾಯಿತ ಕಾನೂನು ಬದ್ಧ ಸಂಸ್ಥೆಯಾಗಿ ಕಾರ್ಯ ನಿರ್ವಹಿಸ್ತಿಲ್ಲ? ಈ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿದ್ದಾರೆ. ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ಕೋರಿದ್ದಾರೆ.
ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕು. ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್ಎಸ್ಎಸ್ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್ಜಿಒಗಳು, ಟ್ರಸ್ಟ್ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್.ಎಸ್.ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದಿದ್ದಾರೆ.
ಆರ್.ಎಸ್.ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ. ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ. ಭಾರತದ ಈ ನೂರನೇ ವರ್ಷದಲ್ಲಿ ದೇಶಕ್ಕೆ ಆರ್.ಎಸ್.ಎಸ್ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು , ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸುವುದು. ನಿಮ್ಮ ಅಧಿಕೃತ ಪ್ರತಿನಿಧಿಗಳನ್ನು ಕಳುಹಿಸಿ ಮೇಲಿನ ವಿಷಯಗಳ ಕುರಿತು ಚರ್ಚೆ ನಡೆಸಲು ನಾವು ಔಪಚಾರಿಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.




