ಮಕ್ಕಳೊಂದಿಗೆ ಕನ್ನಡ ಮಾತನಾಡಿ : ಸಿಎಂ ಯಡಿಯೂರಪ್ಪ ಕರೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ 65ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನ್ನಡ ರಾಜ್ಯೋತ್ಸವದ ಶುಭಾಷಯ ತಿಳಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಾಡಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆ ದೈನಂದಿನ ಚಟುವಟಿಕೆಗಳಲ್ಲಿ ಹೆಚ್ಚು ಕನ್ನಡ ಬಳಸಬೇಕು. ಪೋಷಕರು ಮಕ್ಕಳೊಂದಿಗೆ ಕನ್ನಡದಲ್ಲಿಯೇ ಮಾತನಾಡಬೇಕು. ಇದರಿಂದ ನಮ್ಮ ಭಾಷೆ ಉಳಿವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲಿ ಶುಭಕೋರಿದ್ದಾರೆ. ಅವರಿಗೆ ಕರ್ನಾಟಕದ ಜನರ ಪರವಾಗಿ ಅಭಿನಂದನೆ ತಿಳಿಸುತ್ತೇನೆ. ಕೋವಿಡ್ ಕಾರಣದಿಂದಾಗಿ ಈ ಬಾರಿ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕನ್ನಡ ಭಾಷೆ ಉಳಿವು ಹಾಗೂ ಅಭಿವೃದ್ಧಿಗಾಗಿ ಮುಂದಿನ ವರ್ಷ ಕನ್ನಡ ಕಾಯಕ ವರ್ಷ ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿಯಲ್ಲಿ ಮಾತೃಭಾಷೆ, ಪ್ರಾದೇಶಿಕ ಭಾಷೆಯಲ್ಲಿ ಆರಂಭಿಕ ಶಿಕ್ಷಣಕ್ಕೆ ಒತ್ತು ನೀಡಿರುವುದು ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಇನ್ನಷ್ಟು ಬಲ ಬಂದಿದೆ. ತಂತ್ರಜ್ಞಾನ ನಮ್ಮ ಬದುಕನ್ನು ಆವರಿಸಿಕೊಂಡಿದ್ದು, ಇದು ನಮ್ಮ ಭಾಷೆ ಹಾಗೂ ಸಂಸ್ಕೃತಿಯ ಮೇಲೆ ಛಾಪು ಮೂಡಿಸಿದೆ. ಶರವೇಗದಲ್ಲಿ ಬೆಳೆಯುತ್ತಿರುವ ಮಾಹಿತಿ ತಂತ್ರಜ್ಞಾನಕ್ಕೆ ತಕ್ಕಂತೆ ನಾವು ನಮ್ಮ ಭಾಷೆಯನ್ನು ಸಜ್ಜುಗೊಳಿಸುವುದು ಅನಿವಾರ್ಯ ಎಂದು ತಿಳಿಸಿದರು.

ಇದಕ್ಕೂ ಮುನ್ನ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.



