Belagavi NewsBelgaum NewsKannada NewsKarnataka NewsLatest

ಮಕ್ಕಳ ರಕ್ಷಣೆ ಮಾಡುವುದು ಎಲ್ಲರ ಆದ್ಯ ಕರ್ತವ್ಯ: ಪಿ. ಮುರಳಿ ಮೋಹನ ರೆಡ್ಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಆಡಳಿತ, ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಇಂತಹ ತರಬೇತಿ ಕಾರ್ಯಾಗಾರವು ತುಂಬಾ ಮಹತ್ವದ್ದಾಗಿದ್ದು, ಸಂವಿಧಾನದ ಅನುಚ್ಛೇದ 21 (ಎ) ಪ್ರಕಾರ 6 ರಿಂದ 14 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡಬೇಕು. ಅದರಂತೆ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಪಿ. ಮುರಳಿ ಮೋಹನ ರೆಡ್ಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸೇವಕ ಸಂಸ್ಥೆ, ಬೆಳಗಾವಿ ಚೈಲ್ಡ್ ರೈಟ್ಸ್ ಟ್ರಸ್ಟ್, ಕರ್ನಾಟಕ ಬಾಲ್ಯವಿವಾಹ ವಿರೋಧಿ ವೇದಿಕೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಚಿಕ್ಕೋಡಿ ಲೋಕೋಪಯೋಗಿ ಇಲಾಖೆಯ ಸಭಾಗೃಹದಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಅಂಗನವಾಡಿ ಮೇಲ್ವಿಚಾರಕಿಯರಿಗೆ ಜಿಲ್ಲಾ ಮಟ್ಟದ ಬಲವರ್ಧನೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಮಕ್ಕಳ ಹಕ್ಕುಗಳು ಹಾಗೂ ಯಾವುದೇ ಕಾಯ್ದೆ ಕಾನೂನುಗಳು ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಂದೆ ಬರುವಂತಹ ಪ್ರಕರಣಗಳು ತುಂಬಾ ಗಂಭೀರವಾಗಿರುತ್ತವೆ. ಅಂತಹ ಪ್ರಕರಣಗಳನ್ನು ಹೇಗೆ ಬಗೆಹರಿಸಬೇಕು ಮತ್ತು ಅದಕ್ಕೆ ಪರಿಹಾರವನ್ನು ಹೇಗೆ ಕಂಡುಕೊಳ್ಳಬೇಕೆಂಬುದು ತಿಳಿಯುವುದಿಲ್ಲ. ಏಕೆಂದರೆ ಕೆಲವು ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕೋ ಅಥವಾ ಕಾನೂನಿನ ದೃಷ್ಠಿಯಿಂದ ಕಾರ್ಯನಿರ್ವಹಿಸಬೇಕೋ ಎಂಬುದು ತಿಳಿಯುವುದು ಕಷ್ಟವಾಗಿರುತ್ತದೆ. ಆದ್ದರಿಂದ ನಾವು ಮಕ್ಕಳಿಗೆ ನ್ಯಾಯಯುತವಾದ ಮಾರ್ಗವನ್ನು ತೋರಿಸಿ ಮಕ್ಕಳ ರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ” ಎಂದರು.

“ಪಂಚಾಯತ ರಾಜ್ ಅಧಿನಿಯಮ ಕಾಯ್ದೆ 1993ರ ತಿದ್ದುಪಡಿ 2015ರ ಪ್ರಕಾರ ಗ್ರಾಮ ಪಂಚಾಯಿತಿ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಕಾವಲು ಸಭೆ ಮಾಡುವುದು ಕಡ್ಡಾಯವಾಗಬೇಕು. ಏಕೆಂದರೆ ಎಲ್ಲಿಯೂ ಕೂಡ ಕಾವಲು ಸಮಿತಿ ಸಭೆ ನಡೆಯುತ್ತಿಲ್ಲ ಕೇವಲ ನಡುವಳಿಯಲ್ಲಿ ಮಾತ್ರ ಇದೆ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆ ಆಗಬೇಕೆಂದರೆ ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾತ್ರ ಹೊಣೆಗಾರರಾಗದೇ, ಗ್ರಾಮ ಲೆಕ್ಕಾಧಿಕಾರಿಗಳು, ಬೀಟ್ ಪೊಲೀಸ್, ಶಾಲಾ ಮುಖ್ಯೋಪಾಧ್ಯಾಯರಿಗೆ ಸಮಿತಿಯ ಬಗ್ಗೆ ಅರಿವು ಮೂಡಿಸುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯವಾಗಿದೆ. ಇವರಿಗೆ ಅರಿವು ಜವಾಬ್ದಾರಿ ಮೂಡಿಸಿದ್ದೇ ಆದಲ್ಲಿ ಪೋಕ್ಸೋ, ಆರ್.ಟಿ.ಇ. ಬಾಲ್ಯವಿವಾಹ, ಬಾಲಕಾರ್ಮಿಕ ಹಾಗೂ ಕಾನೂನಿನೊಡನೆ ಸಂಘರ್ಷಕ್ಕೊಳಗಾದ ಮಕ್ಕಳ ಸಮಸ್ಯೆಗಳನ್ನು ಚರ್ಚಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ತಕ್ಷಣಕ್ಕೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಬಹುದು ಎಂದರು.

ಈ ರೀತಿ ಕಡ್ಡಾಯವಾಗಿ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ 3 ತಿಂಗಳಿಗೊಮ್ಮೆ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯನ್ನು ರಚಿಸಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ರಕ್ಷಣೆ ಮಾಡುವಲ್ಲಿ ಸೇವೆ ಸಲ್ಲಿಸೋಣ ಎಂದು ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಹಾಂತೇಶ ಭಜಂತ್ರಿ ಅವರು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಬೆಂಗಳೂರಿನ ಮಕ್ಕಳ ಹಕ್ಕು ಟ್ರಸ್ಟ್ ಕಾರ್ಯಕಾರಿ ನಿರ್ದೇಶಕ ಡಾ. ವಾಸುದೇವ ಶರ್ಮಾ ಹಾಗೂ ಕೊಪ್ಪಳದ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಸಂಯೋಜಕ ಹರೀಶ ಜೋಗಿ ತಮ್ಮ ವಿಷಯ ಮಂಡನೆಯಲ್ಲಿ “ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕೆಂದರೆ, ಬಾಲ್ಯವಿವಾಹ, ಬಾಲಕಾರ್ಮಿಕ, ಜೀತ ಪದ್ಧತಿ, ಅಡತಡೆ ಉಂಟು ಮಾಡುತ್ತದೆ. ಅದನ್ನು ತಡೆಯುವ ಅಧಿಕಾರ ನಮಗೆ ಇದೆ. ಈ ಹಕ್ಕನ್ನು ನಮಗೆ ಸಂವಿಧಾನ ಕೊಟ್ಟಿದೆ. 2019ರ ವರದಿಯ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಮಾಡುವದರಲ್ಲಿ 4ನೇ ಸ್ಥಾನ ಇದೆ ಎಂದು ಸರ್ವೇಯಲ್ಲಿ ತಿಳಿದು ಬಂದಿದೆ. ಆದ್ದರಿಂದ ಇದನ್ನು ಕೆಳಹಂತಕ್ಕೆ ತರುವುದು ನಮ್ಮ ಕರ್ತವ್ಯವಾಗಿದೆ” ಎಂದರು.

ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಬೆಳಗಾವಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜ್ ಆರ್., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ದ್ ಮೇರಿ ಜೆ. ಹಾಗೂ ಚಿಕ್ಕೋಡಿ, ನಿಪ್ಪಾಣಿ ,ಹುಕ್ಕೇರಿ ಸಿಡಿಪಿಒಗಳು ಭಾಗವಹಿಸಿದ್ದರು.

ರಾಷ್ಟ್ರಪತಿಯಿಂದ ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತ ಶೋಭಾ ಗಸ್ತಿ, ಕಾರ್ಯಾಗಾರವನ್ನು ನಡೆಸಿಕೊಟ್ಟರು. ಜೆ.ಟಿ. ಲೋಕೇಶ್ವರಪ್ಪಾ ನಿರೂಪಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button