
ಪ್ರಗತಿವಾಹಿನಿ ಸುದ್ದಿ: ಪರೀಕ್ಷೆ ಇಲ್ಲದೇ ಪಿಯುಸಿ ವಿದ್ಯಾರ್ಥಿಗಳಿಗೆ ನಕಲಿ ಅಂಕಪಟ್ಟಿ ತಯಾರಿಸಿ ವಿತರಿಸುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಶಾಂತ್ ಗುಂಡುಮನಿ (41), ಮೋನಿಷ್ ಕೆ.ಜಿ (36) ಹಾಗೂ ರಾಜಶೇಖರ್ (41) ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಅಕಾಡೆಮಿಯೊಂದನ್ನು ತೆರೆದು ಪಿಯುಸಿಗೆ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಲ್ಲಿ ಅಂಕಪಟ್ಟಿ ನೀಡುತ್ತಿದ್ದರು.
ವಿದ್ಯಾರ್ಥಿಗಳಿಂದ 5ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಅಕಾಡೆಮಿ ತೆರೆದು ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಸಿಕೊಂಡು ಬಳಿಕ ಕೆಲ ದಿನಗಳಲ್ಲೇ ಪಿಯುಸಿ ಅಂಕಪಟ್ಟಿ ನೀಡುತ್ತಿದ್ದರು ಎನ್ನಲಾಗಿದೆ.ಅಂಕಪಟ್ಟಿ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನಕಲಿ ಅಂಕಪಟ್ಟಿ ಜಾಲದ ಮೂವರನ್ನು ಬಂಧಿಸಿದ್ದಾರೆ.