Karnataka NewsLatestPolitics

*ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ 3 ತಿಂಗಳಿಂದ ವೇತನವಿಲ್ಲ: ರಾಜ್ಯದ ಆರೋಗ್ಯ ಇಲಾಖೆ ಐಸಿಯುನಲ್ಲಿದೆ: ಆರ್.ಅಶೋಕ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಆರೋಗ್ಯ ಇಲಾಖೆಯ ಅವ್ಯವಸ್ಥೆ ಹಾಗೂ ‘ನಮ್ಮ ಕ್ಲಿನಿಕ್’ ಸಿಬ್ಬಂದಿಯ ವೇತನ ವಿಳಂಬವನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದ ಆರೋಗ್ಯ ಇಲಾಖೆಯೇ ಇಂದು ಐಸಿಯು ತಲುಪಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಸರ್ಕಾರ ಬದಲಾದರೂ ಸಹ ಆರೋಗ್ಯ ಇಲಾಖೆಯ ಹಣೆಬರಹ ಮಾತ್ರ ಬದಲಾಗಿಲ್ಲ ಎಂದು ಆರ್. ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Home add -Advt

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ನೀತಿಗಳಿಂದಾಗಿ ಸಾರ್ವಜನಿಕ ಆರೋಗ್ಯ ಕ್ಷೇತ್ರ ಸಂಪೂರ್ಣ ಹದಗೆಟ್ಟಿದೆ. ಜೀವ ಉಳಿಸಬೇಕಾದ ಇಲಾಖೆಯಲ್ಲೇ ಬರೋಬ್ಬರಿ 35,196 ಹುದ್ದೆಗಳು ಖಾಲಿ ಇವೆ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ಕೇವಲ ಹೆಸರಿಗಷ್ಟೇ ಉಳಿದಿದ್ದು, ಸಮಸ್ಯೆಗಳ ಆಗರಗಳಾಗಿವೆ. ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ಬರುವ ರೋಗಿಗಳನ್ನು ನೋಡಿಕೊಳ್ಳುವವರೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕನಿಷ್ಠ ಪ್ಯಾರಾಸಿಟಮಾಲ್ ಮಾತ್ರೆಗಳೂ ಸಿಗದೆ ಬಡ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ ಎಂದು ಕಿಡಿಕಾರಿದ್ದಾರೆ.

ಬಡವರು ಹಾಗೂ ಕೂಲಿ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಆರಂಭವಾಗಿದ್ದ ‘ನಮ್ಮ ಕ್ಲಿನಿಕ್’ ಯೋಜನೆಗೆ ಕಾಂಗ್ರೆಸ್ ಸರ್ಕಾರ ಗರ ಬಡಿದಿದೆ ಎಂದು ಅಶೋಕ್ ಟೀಕಿಸಿದ್ದಾರೆ. ಇಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಗೆ ಕಳೆದ 3 ತಿಂಗಳಿಂದ ವೇತನವನ್ನೇ ನೀಡಿಲ್ಲ. ದುಡಿಯುವ ಕೈಗಳಿಗೆ ಸಂಬಳ ಕೊಡಲೂ ಸಾಧ್ಯವಾಗದ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಾದರೂ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.

Related Articles

Back to top button