Kannada NewsKarnataka News

*ಕಾಲಮಿತಿಯೊಳಗೆ ಪರಿಶಿಷ್ಟ ಜಾತಿ ಸಮೀಕ್ಷೆ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಾದ್ಯಂತ ಪರಿಶಿಷ್ಟ ಜಾತಿಗಳ (ಒಳ ಮೀಸಲಾತಿ) ಸಮಗ್ರ ಸಮೀಕ್ಷೆಗೆ ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡಿ ಪ್ರಮುಖ ಮಾಹಿತಿಯನ್ನು ತಪ್ಪದೇ ಪಡೆದುಕೊಂಡು, ಕಾಲಮಿತಿಯೊಳಗೆ ಗಣತಿ ಕಾರ್ಯ ಪೂರ್ಣಗೊಳಸಿ ಸಕಾಲದಲ್ಲಿ ವರದಿ ಸಲ್ಲಿಸಬೇಕು ಎಂದು ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಮೇ.15) ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಿಗೆ ಆಹಾರ, ಸ್ವಚ್ಛತೆ, ಕಲಿಕೆಗೆ ಅಗತ್ಯವಿರುವ ಸಾಮಗ್ರಿಗಳು ಸೇರಿದಂತೆ ಯಾವುದೇ ಕೊರತೆಯಾಗಬಾರದು. ಅಂಗನವಾಡಿ ಪ್ರಾರಂಭದ ಮೊದಲ ದಿನ ಶೇಕಡಾ 70% ಮಕ್ಕಳು ಹಾಜರಾಗಿದ್ದಾರೆ ಆದರೂ ಇನ್ನೂ ಹೆಚ್ಚಿನ ಮಕ್ಕಳ ಹಾಜರಾತಿ ಕೈಗೊಳ್ಳಲು ಮಕ್ಕಳ ಮನೆ ಮನೆಗಳಿಗೆ ಮಾಹಿತಿ ನೀಡಿ ಮಕ್ಕಳನ್ನು ಅಂಗನವಾಡಿಗಳಿಗೆ ಕಳುಹಿಸಲು ತಿಳಿಸಬೇಕು ಎಂದು ಸೂಚಿಸಿದರು.

ಅಂಗನವಾಡಿ ಕಟ್ಟಡಗಳನ್ನು ನರೇಗಾ ಯೋಜನೆಯಡಿ ನಿರ್ಮಾಣ ಮಾಡಲಾಗುತ್ತಿದೆ ಸಾಮಗ್ರಿಗಳ ಪೂರೈಕೆ ಗುತ್ತಿಗೆದಾರರಿಗೆ ಸಕಾಲದಲ್ಲಿ ಬಿಲ್ ಪಾವತಿಸಬೇಕು ಇದರಿಂದ ಕಾಮಗಾರಿಗಳು ಬೇಗನೆ ಪೂರ್ಣಗೊಳ್ಳುತ್ತವೆ.

Home add -Advt

ನರೇಗಾ ಯೋಜನೆಯಡಿಯ ಪ್ರತಿ ಕಾಮಗಾರಿಗಳನ್ನು ಪರಿಶೀಲಿಸಬೇಕು. ಒಂದುವೇಳೆ ಕಳಪೆ ಕಾಮಗಾರಿ ಎಂದು ಕಂಡು ಬಂದಲ್ಲಿ ಕೂಡಲೇ ಅಂತಹ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಅಂತಹ ಸ್ಥಳಗಳನ್ನು ಪರಿಶೀಲಿಸಿ ಸಂಬಂಧಿಸಿದ ಗ್ರಾಮ ಪಂಚಾಯತಿಗಳಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು.

ಗಣತಿ ಕಾರ್ಯದಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಕುಟುಂಬಗಳು ಗಣತಿಯಿಂದ ವಂಚಿತರಾಗದಂತೆ ನಿಗಾವಹಿಸಬೇಕು. ಅಂಗನವಾಡಿಗಳು ಪ್ರಾರಂಭಗೊಳ್ಳಲಿದ್ದು ಅಂಗನವಾಡಿಗಳ ಸ್ವಚ್ಚತೆ, ಕಲಿಕಾ ಸಾಮಗ್ರಿ, ಆಹಾರ ಧಾನ್ಯಗಳ ಸರಬರಾಜು ಸಮರ್ಪಕವಾಗಿ ಇರುವಂತೆ ನಿಗಾವಹಿಸಬೇಕು.

ನರೇಗಾ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಲಾಗುವ ಮಾನವ ದಿನಗಳ ಸೃಜನೆಯ ಗುರಿಯನ್ನು ಪೂರ್ಣಗೊಳಿಸಬೇಕು. ಈ ಯೋಜನೆಯಡಿ ಕೂಲಿ ಹಾಗೂ ಯಂತ್ರಗಳ ಕೂಲಿಯನ್ನು ಶೀಘ್ರವೇ ಸಂದಾಯ ಮಾಡಲು ಕ್ರಮ ವಹಿಸಬೇಕು.

ಜಿಲ್ಲೆಯಲ್ಲಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆ ನಿಗಾವಹಿಸಬೇಕು. ಗ್ರಾಮ ಪಂಚಾಯತಗಳಲ್ಲಿರುವ ನೀರು ಸರಬರಾಜು ಟ್ಯಾಂಕರಗಳು ಸ್ಥಿತಿಗತಿಗಳ ವರದಿ ನೀಡುವಂತೆ ತಿಳಿಸಿದರು.

ಮಳೆಗಾಲ ಪ್ರಾರಂಭಕ್ಕೂ ಮುನ್ನ ಎಲ್ಲ ಜಲ ಸಂಗ್ರಹಗಾರಗಳನ್ನು ಸ್ವಚ್ಛಗೊಳಿಸಬೇಕು. ಅದೇ ರೀತಿ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಜಲ ಸಂಗ್ರಹಗಾರಗಳ ಸ್ವಚ್ಛಗೊಳಿಸಿ ಶುದ್ಧ ನೀರು ಸರಬರಾಜುವಿಗೆ ಕ್ರಮವಹಿಸಬೇಕು.

ಜಲಜೀವನ ಮಿಷನ್ ಯೋಜನೆಯಡಿಯಲ್ಲಿನ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ಕೈಗೊಂಡಂತಹ ಪ್ರದೇಶಗಳಲ್ಲಿನ ರಸ್ತೆಗಳ ದುರಸ್ತಿಗೆ ಕ್ರಮ ವಹಿಸಬೇಕು. ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಮುದಾಯ ಶೌಚಾಲಯಗಳ ಬಳಕೆ ಕುರಿತು ಜಾಗೃತಿ ಮೂಡಿಸಿ ಅವುಗಳ ಸ್ವಚ್ಛತೆಗೆ ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿನ ಕಲಿಕಾ ಗುಣಮಟ್ಟವನ್ನು ಸುಧಾರಿಸಲು ಅಧಿಕಾರಿಗಳು ಅಗತ್ಯದ ಕ್ರಮಗಳನ್ನು ಕೈಗೊಳ್ಳಬೇಕು. ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಆಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಹೇಳಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ ಕುಡಿಯುವ ನೀರು ಸಮಸ್ಯೆ ಎದುರಾದರೆ ಬೋರ್ವೆಲ್ ಬಾಡಿಗೆ ಪಡೆದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಈಗಾಗಲೇ ಸಭೆ ಕರೆದು ನಿರ್ದೇಶನ ನೀಡಲಾಗಿದೆ. ಹದಿನೈದನೇ ಹಣಕಾಸು ಯೋಜನೆಯಡಿ ಪ್ರತಿ ಪಂಚಾಯತಿಗಳಿಗೆ ಒಂದು ಟ್ಯಾಂಕರ್ ಗಳನ್ನು ಒದಗಿಸಲಾಗಿದೆ. ಅದೇ ರೀತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗಬರದು ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತರಾದ ಶುಭ, ಬಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ್ ದಿವಟರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್.ನಾಗರಾಜ್, ಕ್ರೀಡಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button