ಇನ್ನೆರಡು ದಿನಗಳಲ್ಲಿ ಸಚಿವರ ಪಟ್ಟಿ ರವಾನೆ: ಆಗಸ್ಟ್ 3ರಂದು ನೂತನ ಸಚಿವರ ಪ್ರಮಾಣವಚನ?

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿದರು.
ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸಿಎಂ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್, ಕೆ.ಸಿ ವೇಣುಗೋಪಾಲ್, ಸುರ್ಜೆವಾಲ ಭಾಗಿಯಾಗಿದ್ದರು. ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇನ್ನೆರಡು ದಿನಗಳಲ್ಲಿ ಪಟ್ಟಿ ರವಾನಿಸುವುದಾಗಿ ವರಿಷ್ಠರು ತಿಳಿಸಿದ್ದಾರೆ ಎನ್ನಲಾಗಿದೆ.
ಸಭೆ ಅಂತ್ಯವಾಗಿದ್ದು, ಸಿಎಂ ಡಿ.ಕೆ ಶಿವಕುಮಾರ್ ನಾಲ್ಕು ದಿನಗಳ ಬಳಿಕ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆದರೆ ನೂತನ ಸಚಿವ ಪಟ್ಟಿ ಮಾತ್ರ ಇನ್ನೂ ನಿಗೂಢವಾಗಿದೆ.
ರಾಹುಲ್ ಗಾಂಧಿ ಅವರು ರಾಜ್ಯ ನಾಯಕರೊಂದಿಗಿನ ಸಭೆ ಬಳಿಕ ಖರ್ಗೆ, ಸುರ್ಜೆವಾಲ, ವೇಣುಗೋಪಾಲ್ ಜೊತೆ ಚರ್ಚೆ ಮುಂದುವರೆಸಿದ್ದು, ಪಟ್ಟಿ ಫೈನಲ್ ಮಾಡಿ ಭಾನುವಾರ ರಾತ್ರಿ ರವಾನಿಸುವ ಸಾಧ್ಯತೆಗಳಿವೆ. ಅಥವಾ ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಅಂತಿಮ ಪಟ್ಟಿಯೊಂದಿಗೆ ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಸಿಎಂ ಡಿಕೆ ಶಿವಕುಮಾರ್ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದು, ಆಗಸ್ಟ್ 3ರಂದು ಸೋಮವಾರ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.




