Kannada NewsKarnataka NewsLatestPolitics

*ಬಿಜೆಪಿ ನಾಯಕರು ಇದನ್ನು ಅರ್ಥಮಾಡಿಕೊಳ್ಳಬೇಕು ; ಸಚಿವ ರಾಮಲಿಂಗಾರೆಡ್ಡಿ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಕಾವೇರಿ ನೀರಿಗಾಗಿ ಒತ್ತಾಯಿಸಿ ನಡೆಸುತ್ತಿರುವ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಭಾಷೆ, ನೆಲ, ಜಲದ ವಿಚಾರದಲ್ಲಿ ಅನ್ಯಾಯವಾದಾಗ ಪ್ರತಿಭಟನೆಗಳು ಸಹಜ ಎಂದು ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಹೋರಾಟಗಾರರಿಗೆ ನಮ್ಮಿಂದ ಯಾವುದೇ ತೊಂದರೆಯುಂಟಾಗಲ್ಲ. ರಾಜ್ಯದ ಹಿತಕ್ಕಾಗಿ ಹೋರಾಟ ಮಾಡಲಿ ಎಂದರು.

Home add -Advt

ಕಳೆದ ವರ್ಷ 660 ಟಿಎಂಸಿ ನೀರು ತಮಿಳುನಾಡಿಗೆ ಬಿಟ್ಟಿದ್ದೇವೆ. ರಾಜ್ಯದಲ್ಲಿ ಮಳೆ ಇಲ್ಲ, ಮಾನಿಟರಿ ವಿಂಗ್ ಗೆ ಎಲ್ಲವೂ ಗೊತ್ತಿದೆ. ಸುಪ್ರೀಂಕೋರ್ಟ್ ಗೂ ನೀರಿಲ್ಲದಿರುವ ಬಗ್ಗೆ ಮಾಹಿತಿ ಇದ್ದರೂ ಸ್ಟೇ ನೀಡಿಲ್ಲ. ಇನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ಇದ್ದರೂ ಮಧ್ಯಪ್ರವೇಶ ಮಾಡುತ್ತಿಲ್ಲ. ರಾಜ್ಯ ಬಿಜೆಪಿ ನಾಯಕರು ಮೋದಿಯವರಿಗೆ ಮನವರಿಕೆ ಮಾಡುವುದನ್ನು ಬಿಟ್ಟು ಆರೋಪ ಮಾಡುವುದರಲ್ಲಿಯೇ ತಲ್ಲೀನರಾಗಿದ್ದಾರೆ ಎಂದು ಕಿಡಿಕಾರಿದರು.

ಮಳೆ ಬಾರದಿರುವುದಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿದೆಯೆ? ಮಳೆ ಬಾರದಿರುವುದು ನೈಸರ್ಗಿಕ ವಿಕೋಪ. ಇದನ್ನು ಅರ್ಥಮಾಡಿಕೊಳ್ಳಬೇಕು. ಸುಮ್ಮನೇ ರಾಜಕೀಯಕ್ಕಾಗಿ ಆರೋಪ ಮಾಡುವುದಲ್ಲ. ವಿಪಕ್ಷಗಳು ಈ ವಿಚಾರವಾಗಿ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದರು.

Related Articles

Back to top button