
ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ನಡೆದ ಹೈಕಮಾಂಡ್ ನಾಯಕರೊಂದಿಗಿನ ಮ್ಯಾರಥಾಅನ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದು, ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಮಧ್ಯೆ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರ್ಜೇವಾಲ, ಅಂತಹ ಯಾವುದೇ ನಿರ್ಧಾರಗಳನ್ನು ಹೈಕಮಾಂಡ್ ನಾಯಕರು ಕೈಗೊಂಡಿಲ್ಲ. ಸುಮ್ಮನೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸಧ್ಯಕ್ಕೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ನಾಳೆ ಯಾವುದೇ ಶಾಸಕಾಂಗ ಪಕ್ಷದ ಸಭೆಯನ್ನೂ ಕರೆದಿಲ್ಲ. ನಾಳೆ ಹೀಗಾಗಲಿದೆ, ಹಾಗೇ ನಡೆಯಲಿದೆ ಎಂದು ಸುದ್ದಿ ಹರಡಬೇಡಿ. ಯಾವುದೇ ಅಧಿಕೃತ ಮಾಹಿತಿ ಇಲ್ಲದೇ ಊಹಾಪೋಹಗಳಗೆ ಕಿವಿಗೋಡಬೇಡಿ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯನವರು ವಿಪಕ್ಷನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಕಷ್ಟು ಅನುಭವಗಳು ಅವರಿಗಿದೆ. ಹಾಗೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹಲವು ಮುಖ್ಯಮಂತ್ರಿಗಳ ಜೊತೆಗೆ ಕೆಲಸ ಮಾಡಿದ ಅನುಭವಿದೆ. ಸಂಘಟನಾ ಚತುರತೆ ಇರುವವರು. ರಾಜ್ಯದ ಜನರ ಹಿತ ಕಾಪಾಡುವಂತಹ ನಿರ್ಧಾರವನ್ನು ಕೈಗೊಳ್ಳಲಾಗುವುದು. ಸಧ್ಯಕ್ಕೆ ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ರಣದೀಪ್ ಸಿಂಗ್ ಸುರ್ಜೇವಾಅಲಾ ಅವರ ಈ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ. ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯಲಿದ್ದಾರೆಯೇ? ಬೆಂಬ ಪ್ರಶ್ನೆ ಮೂಡಿದೆ.




