
ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ 7 ಆರೋಪಿಗಳು ಜೈಲಿನಿಂದ ಬೇಲ್ ಪಡೆದು ಹೊರಬಂದ ಬಳಿಕ ಜೀಪ್ನಲ್ಲಿ ಮೆರವಣಿಗೆ ಮಾಡಿದ್ದರು. ಇದೀಗ ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಸವಣೂರ ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆರೋಪಿಗಳಾದ ಅಪ್ತಾಬ್ ಚಂದನಕಟ್ಟಿ ಮದರ್ ಸಾಬ್ ಮಂಡಕ್ಕಿ ಮಹಮದ್ ಸಾದಿಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ, ಶೋಯಿಬ್ ಮುಲ್ಲಾ ತೌಸಿಪ್ ಅಹ್ಮದ್ ಚೌಟಿಯನ್ನು ಒಂದು ವರ್ಷಗಳ ಕಾಲ ಯಾದಗಿರಿಗೆ ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.
ಗಡಿಪಾರು ಮಾಡುವಂತೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕಳೆದ ವರ್ಷ ಜೂನ್ನಲ್ಲಿ ಸವಣೂರ ಉಪವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಇವರನ್ನು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವ ಇರುವ ಅಂಶ ಕಂಡುಬಂದ ಹಿನ್ನೆಲೆಯಲ್ಲಿ ಒಂದು ವರ್ಷ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಿದ್ದಾರೆ.
ಅಕ್ಕಿಆಲೂರ ಸಮೀಪದ ನಾಲ್ಕರ ಕ್ರಾಸ್ ಬಳಿ ಸಮೀವುಲ್ಲಾ ಸೇರಿದಂತೆ 7 ಆರೋಪಿತರು ಮಹಿಳೆಯೊಬ್ಬರ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಬಗ್ಗೆ ಹಾನಗಲ್ ಪೊಲೀಸ್ ಠಾಣೆಯಲ್ಲಿ 2024ರ ಜನವರಿ 11ರಂದು ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು.
ಇತ್ತೀಚೆಗೆ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಈ ವೇಳೆ ಆರೋಪಿಗಳು ಹಾವೇರಿ ಜಿಲ್ಲಾ ಕಾರಾಗೃಹದಿಂದ ಅಕ್ಕಿಆಲೂರಿನವರೆಗೆ ತೆರೆದ ಜೀಪಿನಲ್ಲಿ ಕೇಕೆ ಹಾಕುತ್ತಾ ಮೆರವಣಿಗೆ ಮೂಲಕ ತೆರಳಿದ್ದು ದೊಡ್ಡ ಸುದ್ದಿಯಾಗಿತ್ತು.
ಅಲ್ಲದೇ ಪ್ರಕರಣದ ಸಾಕ್ಷಿದಾರರಿಗೆ ಜೀವ ಬೆದರಿಕೆ ಒಡ್ಡುವ ರೀತಿ ವರ್ತಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಆರೋಪಿಗಳು ಹುಡುಗಿಯರನ್ನ ಚುಡಾಯಿಸುವುದು, ಹುಡುಗಿಯರ ಅಪಹರಣ, ಗಲಭೆಗೆ ಪ್ರಚೋದನೆ ನೀಡುವುದು ಸೇರಿದಂತೆ ಹಲವು ಆರೋಪಗಳಿವೆ. ಈತನ ವಿರುದ್ಧ ಮೂರು ಪ್ರಕರಣ ದಾಖಲಾಗಿವೆ. ಪದೇ ಪದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಯುವಕರನ್ನು ಹಾಳು ಮಾಡುತ್ತಿದ್ದ ಎಂದು ಪೊಲೀಸರು ದೂರಿದ್ದರು.
ಈ ಕುರಿತು ವಿಚಾರಣೆ ನಡೆಸಿದ ಸವಣೂರು ಎಸಿ ಶುಭಂ ಶುಕ್ಲಾ ಆರೋಪಿ ಸಮಿವುಲ್ಲಾಗೆ ಗಡಿಪಾರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಯಾದಗಿರಿಯ ಹುಣಸಗಿ ಪೊಲೀಸ್ ಠಾಣೆಗೆ ಆರೋಪಿ ಸಮೀವುಲ್ಲಾ ಪ್ರತಿದಿನ ಹಾಜರಾಗಿ ಹಾಜರಾತಿ ನಮೂದಿಸಬೇಕು. ಬಾಕಿ ಇರುವ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಲು ಬರುವಾಗ ಹುಣಸಗಿ ಠಾಣೆಗೆ ಮಾಹಿತಿ ನೀಡಬೇಕು. ಈ ಸಂದರ್ಭದಲ್ಲಿ ಮುದ್ದೇಬಿಹಾಳ, ಹುನಗುಂದ, ಗದಗ, ಹುಬ್ಬಳ್ಳಿ ಮಾರ್ಗದ ಮೂಲಕವೇ ಹಾವೇರಿ ಜಿಲ್ಲೆಗೆ ಪ್ರವೇಶಿಸಬೇಕು ಎಂದು ಎಸಿ ಆದೇಶದಲ್ಲಿ ಷರತ್ತುಗಳನ್ನು ವಿಧಿಸಿದ್ದಾರೆ.




