Kannada NewsKarnataka NewsLatest
Breaking News: ವಿಷಾಧಿಸಿ, ಹೇಳಿಕೆಯನ್ನು ಹಿಂದಕ್ಕೆ ಪಡೆದ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾರೀ ವಿವಾದವೆಬ್ಬಿಸಿದ್ದ ಹಿಂದೂ ಶಬ್ಧದ ಕುರಿತು ತಮ್ಮ ಹೇಳಿಕೆಯ ಕುರಿತು ವಿಷಾಧ ವ್ಯಕ್ತಪಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಹೇಳಿಕೆಯನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಅವರ ಪತ್ರದ ಪೂರ್ಣ ಪಾಠ ಇಲ್ಲಿದೆ –

ದಿನಾಂಕ:06-11-2022 ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ.
ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿರುತ್ತೇನೆ.
ಇದನ್ನು ನಾನು ವಿಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಬದ್ಧ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಠಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ.
ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವದೇನೆಂದರೆ, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಹಾಗೂ ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ.
https://pragati.taskdun.com/politics/satish-jarakiholiclarificationhindu-statment/




