Belagavi NewsBelgaum NewsEducationKannada NewsKarnataka NewsLatest

*ಖಾನಾಪುರದ ಪಿಯು ಕಾಲೇಜು, ಪಿಎಂಶ್ರೀ ಪ್ರಾಥಮಿಕ ಶಾಲೆಯ ಮೂಲಸೌಕರ್ಯಕ್ಕೆ ಅನುದಾನ: ಸಂಸದ ಕಾಗೇರಿ ಭರವಸೆ*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಪಿಎಂಶ್ರೀ ಹಿರಿಯ ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಆಗ್ರಹಿಸಿ ಎರಡೂ ವಿದ್ಯಾಸಂಸ್ಥೆಗಳ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರ ನೇತೃತ್ವದ ನಿಯೋಗ ಭಾನುವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಿತು.

ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂಸದರಿಗೆ ಮನವಿ ಸಲ್ಲಿಸಿ ಮಾತನಾಡಿದ ಸರ್ಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಸನ್ನ ಕುಲಕರ್ಣಿ, “ಸ್ಥಳೀಯ ಸರ್ಕಾರಿ ಪಿಯು ಕಾಲೇಜಿನಲ್ಲಿ 6 ವರ್ಗಕೊಠಡಿಗಳಿವೆ. ಆದರೆ ಪ್ರಸಕ್ತ ವರ್ಷ ಕಾಲೇಜಿನಲ್ಲಿ 620ಕ್ಕೂ ಹೆಚ್ಚು ಮಕ್ಕಳು ದಾಖಲೆ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಕೊಠಡಿಗಳು, ಡೆಸ್ಕ್, ಶೌಚಾಲಯ, ಗ್ರಂಥಾಲಯ ಮತ್ತಿತರ ಸೌಲಭ್ಯಗಳ ಕೊರತೆಯಿದೆ.

Home add -Advt

ಪಿಎಂಶ್ರೀ ಶಾಲೆಯಲ್ಲಿ ಎಲ್.ಕೆ.ಜಿ.ಯಿಂದ 7ನೇ ತರಗತಿವರೆಗಿನ ಶಿಕ್ಷಣ ಬೋಧಿಸಲಾಗುತ್ತಿದ್ದು, ಈ ಶಾಲೆಯಲ್ಲಿ ಕೇವಲ ನಾಲ್ಕು ಕೊಠಡಿಗಳಿವೆ. ಈ ಶಾಲೆಗೆ 10 ಕೊಠಡಿಗಳ ಅವಶ್ಯಕತೆಯಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಎರಡೂ ವಿದ್ಯಾಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಹಾಗೂ ಸಂಸದರ ನಿಧಿಯಡಿ ಅನುದಾನ ಒದಗಿಸಬೇಕು” ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ಕಾಗೇರಿ, “ಪಿಎಂಶ್ರೀ ಶಾಲೆಗೆ ಕೇಂದ್ರದಿಂದ ಅನುದಾನ ಒದಗಿಸುವ ಅವಕಾಶವಿದೆ. ಜೊತೆಗೆ ಪಿಯು ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಗೂ ಅನುದಾನ ಒದಗಿಸುವ ನಿಟ್ಟಿನಲ್ಲಿ ಗಮನಹರಿಸಲಾಗುವುದು” ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಹಲಗೇಕರ, ಪಿಎಂಶ್ರೀ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಮೇಶ ಪೂಜಾರ ಮತ್ತಿತರರು ಇದ್ದರು.


Related Articles

Back to top button