
ಪ್ರಗತಿವಾಹಿನಿ ಸುದ್ದಿ: ಪತ್ನಿ ಪಲ್ಲವಿಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
ನಿನ್ನೆ ಪತ್ನಿಯಿಂದಲೇ ಕೊಲೆಯಾಗಿದ್ದ ಓಂ ಪ್ರಕಾಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಪಾರ್ಥಿವ ಶರೀರವನ್ನು ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ನಲ್ಲಿರುವ ಟೆನ್ನಿಸ್ ಕೋರ್ಟ್ ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಸಂಬಂಧಿಕರು, ಸ್ನೇಹಿತರು, ಹಿರಿಯ ಪೊಲೀಸ್ ಅಧಿಕಾರಿಗಳು, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವಶರೀರವನ್ನು ವಿಲ್ಸನ್ ಗಾರ್ಡನ್ ಚಿತಾಗಾರಕ್ಕೆ ತರಲಾಯಿತು.
ಅಲ್ಲಿಯೂ ಸಂಬಂಧಿಕರು, ಹಿರಿಯ ಅಧಿಕಾರಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಪೊಲೀಸ್ ಪಡೆಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ನಿಂದ ಅಂತಿಮ ವಿಧಿ-ವಿಧಾನ ನೆರವೇರಿಸಲಾಯಿತು. ಬಳಿಕ ಪಾರ್ಥಿವ ಶರೀರಕ್ಕೆ ಪುತ್ರ ಅಗ್ನಿಸ್ಪರ್ಶ ಮಾಡಿದರು. ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪಂಚ ಭೂತಗಳಲ್ಲಿ ಲೀನರಾದರು.